ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಲೋಕಾಯಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರು ಆಧರಿಸಿ
ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎಡಿಜಿಪಿ ಚಂದ್ರಶೇಖರ್ ನೀಡಿದ ದೂರು ಆಧರಿಸಿ ಎನ್ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು, 42ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
“ಕುಮಾರಸ್ವಾಮಿ ಅವರು ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪ ಮಾಡಿದ್ದರು. ಬೆದರಿಕೆ ಹಾಕಿದ್ದರು. ಕರ್ನಾಟಕ ರಾಜ್ಯ ಕೇಡರ್ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಸಿದ್ದರು. ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆಪಾದನೆ ಮಾಡಿದ್ದರು” ಎಂದು ಚಂದ್ರಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಸುದ್ದಿ ಓದಿದ್ದೀರಾ? ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ, ಮತದಾರರಿಗೆ 10 ಲಕ್ಷ ಉಡುಗೊರೆ
ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿದ್ದೆ. ಈ ಹಿನ್ನೆಲೆಯಲ್ಲಿ ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದರು.
ಈ ದೂರಿಗೆ ಸಂಬಂಧಿಸಿ ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಅದರಂತೆ ಸಂಜಯ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್.ಐ.ಆರ್.ನಲ್ಲಿ ಕುಮಾರಸ್ವಾಮಿ ಎ1, ನಿಖಿಲ್ ಎ2 ಹಾಗೂ ಸುರೇಶ್ ಬಾಬು ಎ3 ಆರೋಪಿ ಎಂದು ಉಲ್ಲೇಖಿಸಲಾಗಿದೆ.