ಐಐಟಿ/ ಐಐಎಂ/ ಐಐಎಸ್ಸಿ/ ಎನ್ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ. ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಅಧಿಕ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇಕಡ 60ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಮೈಸೂರು | ರಾಮಾಯಣ ಭಾರತೀಯರ ಜೀವನ ಚರಿತ್ರೆ, ಸಂಸ್ಕೃತಿ ಪ್ರತಿಬಿಂಬಿಸುವ ಮಹಾಕಾವ್ಯ: ಸಚಿವ ಮಹದೇವಪ್ಪ
“ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸು ನನಸಾಗಲಿದೆ. ಐಐಟಿ ಐಐಎಂನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು. ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು” ಎಂದು ಸಚಿವರು ಹೇಳಿದ್ದಾರೆ.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ. ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕು ಎಂದು ಸಚಿವ ಮಹದೇವಪ್ಪ ಮನವಿ ಮಾಡಿದರು.
