ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು.
ಉಡುಪಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಬೆಂಗಳೂರಿನ ರಾಜ್ಯ ಬಾಲಭನವ ಸೊಸೈಟಿ, ಉಡುಪಿ ಜಿಲ್ಲಾ ಬಾಲಭವನ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
“ಪ್ರಕೃತಿಯ ಅಸಮತೋಲನಕ್ಕೆ ಮುಖ್ಯ ಕಾರಣ ಮನುಷ್ಯ. ಆತನ ಅಭಿವೃದ್ಧಿಯ ವೇಗದಿಂದಾಗಿ ಪ್ರಕೃತಿ ನಲುಗಿಹೋಗುತ್ತಿದೆ. ಪರಿಸರ ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕರರ ಜವಾಬ್ದಾರಿಯಾಗಿದ್ದು, ಪರಿಸರ ಉಳಿಸುವುದರೊಂದಿಗೆ ಸಕಲ ಜೀವಿಗಳ ಉಳಿವಿಗೆ ಕಾರಣರಾಗಬೇಕು. ಮಕ್ಕಳು ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು ಮುಕ್ತ ಅವಕಾಶ ಮಾಡಿಕೊಡಬೇಕು” ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮಾತನಾಡಿ, “ಮಕ್ಕಳಲ್ಲಿ ಅವರದ್ದೇ ಆದ ಪ್ರತಿಭೆ ಇರುತ್ತದೆ. ಪೋಷಕರು ಅದನ್ನು ಗುರುತಿಸಿ, ಪ್ರೇರೇಪಿಸುವ ಕೆಲಸ ಮಾಡಬೇಕು. ಪ್ರಕೃತಿಯ ಮಹತ್ವದ ಕುರಿತು ಮಕ್ಕಳಿಗೆ ಪರಿಚಯ ಮಾಡಿಸಬೇಕು. ಇದರಿಂದ ಪರಿಸರವನ್ನು ಉಳಿಸಿ-ಬೆಳೆಸುವಲ್ಲಿ ಅವರುಗಳು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ” ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ ಮಾತನಾಡಿ, “ಸಮಾಜದ ಅಭಿವೃದ್ಧಿಗೆ ಮಕ್ಕಳ ಕೊಡುಗೆ ಅಪಾರ. ಹೊಸ ಹೊಸ ಆವಿಷ್ಕಾರಗಳಿಗೆ ತೆರೆದುಕೊಳ್ಳಲು ಮಕ್ಕಳಿಗೆ ಪೂರಕ ವಾತಾವರಣ ಕಲ್ಪಿಸಬೇಕು. ಪೋಷಕರು, ಗುರು-ಹಿರಿಯರು ಮಕ್ಕಳ ಅಭಿರುಚಿಗಳನ್ನು ಪುರಸ್ಕರಿಸಿ, ಪ್ರೋತ್ಸಾಹಿಸುವ ಕೆಲಸ ಮಾಡಬೇಕು” ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಮಕ್ಕಳು ಪೋಷಕರನ್ನು ಪ್ರೀತಿಸಿ, ಗುರು-ಹಿರಿಯರನ್ನು ಗೌರವಿಸಬೇಕು. ದೇಶದ ಉತ್ತಮ ಪ್ರಜೆಗಳಾಗಿ ಬಾಳಿ” ಎಂದು ಶುಭ ಹಾರೈಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ; ವಿಡಿಯೋ ಹಂಚಿಕೊಂಡ ವ್ಲಾಗರ್
ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆ ಹಾಗೂ ವಾದ್ಯ ಸಂಗೀತ ಸ್ಪರ್ಧೆಗಳು ನಡೆದವು. ಮಕ್ಕಳು ರಚಿಸಿದ ಕ್ರಾಫ್ಟನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ಮಕ್ಕಳ ವಾರ್ಡ್ ಕ್ಲಬ್ನ ಅಧ್ಯಕ್ಷೆ ಕು. ಸುಮನಾ, ಶಾಲಾ ಮಕ್ಕಳು, ಶಿಕ್ಷಕರು, ತೀರ್ಪುಗಾರರು, ಬಾಲಭನದ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.
