ಪ್ರಧಾನಿಯವರು ಇಡಿ, ಐಟಿ ಛೂಬಿಟ್ಟು ಕಂಪನಿಗಳಿಂದ ಸುಲಿಗೆ ಮಾಡಿಸಿದ್ದಾರೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ದೇಶಕ್ಕೆ ಅದಕ್ಕಿಂತ ದೊಡ್ಡ ದುರಂತ ಬೇರಿಲ್ಲ. ದೇಶದಲ್ಲಿ ಎಲೆಕ್ಟ್ರಾಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆಯನ್ನು ಭ್ರಷ್ಟ ಮಾಡಿದ್ದು, ಅಂಥವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಶಾಸಕ ಯತೀಂದ್ರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಬೇಕು. ಅದಕ್ಕೆ ತಡೆಯಾದ ಸಿಎಂ ಸಿದ್ದರಾಮಯ್ಯ ಅವರನ್ನು ಮೊದಲು ಕೆಳಗಿಳಿಸಿದರೆ ಕಾಂಗ್ರೆಸ್ ಶಕ್ತಿಹೀನವಾಗುತ್ತದೆ ಎಂದು ಅವರ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ ಎಂದು ಹರಿಹಾಯ್ದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶಾದ್ಯಂತ ಕಾಂಗ್ರೆಸ್ ಆಡಳಿತ ಇರುವ ಮುಖಂಡರ ಮೇಲೆ ಇಡಿ ದಾಳಿ ನಡೆಸಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿವೆ ಎಂದರು.
ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದವರು ಖುರಾನ್ ಪುಸ್ತಕ, ಪ್ರಾರ್ಥನೆಗಾಗಿ ಮ್ಯಾಟ್ ಜೊತೆ ಒಂದು ಸಾವಿರ ರೂ. ಕೊಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಅಂಥವರು ಉಪ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ರೀತಿ ವಿಪಕ್ಷದವರು ಪ್ರತಿ ಚುನಾವಣೆ ಸಂದರ್ಭದಲ್ಲಿ ಆಪಾದಿಸುವುದು ಸಾಮಾನ್ಯ ಎಂದರು.