ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ನ.25ರೊಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು.
ರಾಜ್ಯದ ಎಲ್ಲ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ವಿಲೇ ಪ್ರಗತಿ ಪರಿಶೀಲನೆ ನಡೆಸಿದರು.
“ಬಗರ್ ಹುಕುಂ ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ ನನ್ನ ಮೇಲೂ ಇದೆ” ಎಂದರು.
“ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಕಳೆದ ಒಂದು ವರ್ಷದಿಂದ ವ್ಯಯಕ್ತಿಕವಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಆದರೂ ಕೆಲವು ತಹಶೀಲ್ದಾರರು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿರುವುದು ವಿಷಾದನೀಯ” ಎಂದು ಅಸಾಮಾಧನ ಹೊರಹಾಕಿದರು.
“ಬಡವರ ಕೆಲಸದ ಬಗ್ಗೆ ಅಧಿಕಾರಿ ವರ್ಗದಿಂದ ಈ ಮಟ್ಟದ ಅಸಡ್ಡೆಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯದ ಒಟ್ಟಾರೆ 14 ಲಕ್ಷ ರೈತರು ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳ ಪೈಕಿ ಅರ್ಹ ಅರ್ಜಿ ಯಾವುದು? ಅನರ್ಹ ಅರ್ಜಿ ಯಾವುದು? ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಒಂದೂವರೆ ವರ್ಷ ಬೇಕಾ?” ಎಂದು ಸಚಿವರು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು
ಅರ್ಹ-ಅನರ್ಹ ವಿಂಗಡನೆಯ ಮಾನದಂಡವೇನು?
“ಅರ್ಜಿದಾರರು ನಿರ್ದಿಷ್ಟ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಗೋಮಾಳ ಭೂಮಿ ಅಧಿಕ ಇಲ್ಲ, ಅರಣ್ಯ ಭೂಮಿಯನ್ನು ಕೋರಿ ಸಾಗುವಳಿಗೆ ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರ ಹೆಸರಿನಲ್ಲಿ ಈಗಾಗಲೇ 4.38 ಎಕರೆಗೂ ಅಧಿಕ ಜಮೀನು ಇದ್ದರೆ, ಅರ್ಜಿದಾರರು ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ್ರದೇಶದಲ್ಲಿ ವಾಸ ಇಲ್ಲದಿದ್ದರೆ, ಅರ್ಜಿಯೇ ನಕಲು ಆಗಿದ್ದರೆ ಅಥವಾ ಅರ್ಜಿದಾರರು ಅಧಿಕಾರಿಗಳ ಕೈಗೆ ಸಿಗದಿದ್ದರೆ ಅಂತಹ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗುವುದು. ಇದರ ಹೊರತಾಗಿ ಬೇರೆ ಸ್ವರೂಪದ ಸಮಸ್ಯೆಗಳು ಕಂಡುಬಂದರೆ ಅದನ್ನೂ ಸಹ ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಹಶೀಲ್ದಾರರಿಗೆ ಸೂಚಿಸಿದರು.
ಮಾಲೂರು ತಹಶೀಲ್ದಾರರಿಗೆ ನೋಟಿಸ್
ಬಗರ್ ಹುಕುಂ ಅರ್ಜಿ ವಿಲೇ ಕೆಲಸದಲ್ಲಿ ಅಸಡ್ಡೆ ತೋರಿದ ಮಾಲೂರು ತಾಲೂಕು ತಹಶೀಲ್ದಾರ್ ರಮೇಶ್ ಅವರಿಗೆ ಶೋಕಾಸ್ ನೋಟಿಸ್ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸಚಿವರು ಸೂಚಿಸಿದರು.
“ಬಗರ್ ಹುಕುಂ ಬಡವರ ಕೆಲಸವಾಗಿದ್ದು, ಅತ್ಯುತ್ತಮವಾಗಿ ಕೆಲಸ ನಿರ್ವಹಿಸುವ ತಹಶೀಲ್ದಾರರುಗಳಿಗೆ ಪ್ರಶಂಸನೀಯ ಪತ್ರ ನೀಡಿ ಸನ್ಮಾನಿಸಲಾಗುವುದು” ಎಂದು ಕೃಷ್ಣ ಬೈರೇಗೌಡ ತಿಳಿಸಿದರು.