ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12% ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ನಬಾರ್ಡ್ ನೀಡುವ ಸಾಲದಲ್ಲಿ ಕಡಿತಗೊಳಿಸದಂತೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದೇವೆ. ಆದರೆ, ಹೆಚ್ಚಿನ ಸಾಲ ಬಿಡುಗಡೆಗೆ ಆರ್ಬಿಐ ಒಪ್ಪಿಲ್ಲವೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳೆಗೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ?” ಎಂದಿದ್ದಾರೆ.
“ನಬಾರ್ಡ್ನಲ್ಲಿ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲಕ್ಕಾಗಿ ನೀಡಲಾಗಿತ್ತು. ಈ ವರ್ಷ 2,340 ಕೊಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ. ರಾಜ್ಯದಲ್ಲಿ ನೀಡಲಾಗುವ ಹಣದಲ್ಲಿ 58%ರಷ್ಟು ಕಡಿಮೆ ಮಾಡಿರುವುದು ರೈತರಿಗೆ ಮಾಡಿರುವ ದ್ರೋಹ. ನಬಾರ್ಡ್ 4.50% ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. 5 ವರ್ಷಗಳ ಅಂಕಿಅಂಶಗಳನ್ನು ತೆಗೆದು ನೋಡಿದರೆ 5,000 ಕೋಟಿ ರೂ.ಗಳಿದೆ. ಸಾಲ ಕೊಡುವುದು ಯಾವಾಗಲೂ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ. ಎಲ್ಲ ರಾಜ್ಯಗಳಿಗೂ ಕಡಿತ ಮಾಡಲಾಗಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವರಿಸಲಾಗಿದೆ. ಆರು ವರ್ಷಗಳಿಂದ ಜಾಸ್ತಿ ಕೊಟ್ಟಿದ್ದು, ಈಗ ಕಡಿಮೆ ಮಾಡಿದರೆ ಹೇಗೆ? ನಮ್ಮ ಸರ್ಕಾರದ ವತಿಯಿಂದ 5 ಲಕ್ಷದವರೆಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದೆ. 4.50% ಬಡ್ಡಿ ಕೊಡುವುದು ನಮ್ಮ ಸರ್ಕಾರ ದೀರ್ಘಾವಧಿ ಮತ್ತು ಮಧ್ಯಮಾವಧಿ ಸಾಲವನ್ನು 5-15 ಲಕ್ಷದವರೆಗೆ 3% ಬಡ್ಡಿದರದಲ್ಲಿ ನೀಡಲಾಗುತ್ತಿದೆ. 1200 ಕೋಟಿಗಳಿಗಿಂತಲೂ ಹೆಚ್ಚು ಬಡ್ಡಿಯನ್ನು ನೀಡುತ್ತೇವೆ. ಈ ಬಗ್ಗೆ ಆರ್ ಅಶೋಕ್, ಬಿ.ಎಸ್ ಯಡಿಯೂರಪ್ಪ, ಯತ್ನಾಳ್, ಸಿ.ಟಿ ರವಿ, ಹೆಚ್.ಡಿ ಕುಮಾರಸ್ವಾಮಿ, ಬಿ.ವೈ ವಿಜಯೇಂದ್ರ ಮಾತನಾಡುವುದಿಲ್ಲ” ಎಂದು ಕಿಡಿಕಾರಿದ್ದಾರೆ.
“ಕರ್ನಾಟಕದಲ್ಲಿ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಕೊಟ್ಟಿದ್ದು ನಮ್ಮ ಸರ್ಕಾರ. 7 ರಿಂದ 5 ಕೆ.ಜಿಗೆ ಇಳಿಸಿದ್ದು ಬಿ.ಎಸ್.ಯಡಿಯೂರಪ್ಪ. 2 ಕೆ.ಜಿಯನ್ನು ಕಡಿಮೆ ಮಾಡಿದಾಗ ಯಾಕೆ ಆರ್ ಅಶೋಕ್ ಉಸಿರೆತ್ತಲಿಲ್ಲ. ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ ಬಿಜೆಪಿ ಬಡವರ ಬಗ್ಗೆ ಮಾತನಾಡುತ್ತಾರೆ. ಆಹಾರ ಪದಾರ್ಥಗಳನ್ನು ಉಚಿತವಾಗಿ ಕೊಡಬೇಕೆಂದು ಯೋಜನೆ ಜಾರಿಗೆ ತಂದಿದ್ದು ನಾವು. ಸರ್ಕಾರಿ ನೌಕರರು, ತೆರಿಗೆದಾರರಿಗೆ ಬಿಪಿಎಲ್ ಕಾರ್ಡು ಕೊಡಬಾರದು ಎಂದು ಹೇಳಿದ್ದೇವೆ. ಈ ಯೋಜನೆ ಮಾಡಿರುವುದು ಬಡವರಿಗಾಗಿ. ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರೇ? ಎಂದು ಪ್ರಶ್ನಿಸಿದರು. ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾಡಿದ್ದಾರಾ? ಎಸ್.ಸಿ.ಎಸ್.ಪಿ/ಟಿಎಸ್.ಪಿ ಕಾಯ್ದೆಯನ್ನು ಎಲ್ಲಿಯಾದರೂ ಜಾರಿಗೆ ತಂದಿದ್ದಾರೆಯೇ? ಬಿಜೆಪಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ” ಎಂದರು.