ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕಾಲಾವಕಾಶದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮೈಸೂರು ನಗರದ ವರುಣಾ ಕ್ಷೇತ್ರದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ(ಎಂಆರ್ಎಚ್ಎಸ್) ರಾಜ್ಯಾಧ್ಯಕ್ಷ ನರಸಪ್ಪ ದಂಡೋರಾ ಎಚ್ಚರಿಸಿದರು.
ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೆ ಎರಡು ತಿಂಗಳು ಕಾಲಾವಕಾಶವನ್ನು ಪಡೆದಿದ್ದಾರೆ. ಒಂದು ತಿಂಗಳೊಳಗಾಗಿ ಜನಸಂಖ್ಯಾ ಆಧಾರದ ಅನುಗುಣವಾಗಿ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.
ಎಂಆರ್ಎಚ್ಎಸ್ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಕಳೆದ 30 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದೆ. ಒಳಮೀಸಲಾತಿ ಜಾರಿಗೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜಿ ಪರಮೇಶ್ವರ, ಎಚ್ ಸಿ ಮಹಾದೇವಪ್ಪ ಅವರೇ ಆಕ್ಷೇಪಿಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ನಿರ್ಮಾಣಗೊಂಡರೆ, ಮಾದಿಗ ಸಮುದಾಯದ ಕಾಂಗ್ರೆಸ್ ಪಕ್ಷದ ನಾಯಕ ಕೆ ಎಚ್ ಮುನಿಯಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆ ಅಭಿವೃದ್ಧಿಗೆ ಸರ್ವೆ ಕಾರ್ಯ; ಸುತ್ತಮುತ್ತಲ ಬಡವರಿಗೆ ವಸತಿ ಕಲ್ಪಿಸಲು ಒತ್ತಾಯ
“ಒಳಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿದರೆ, ಮಾದಿಗ ಸಮುದಾಯಕ್ಕೆ ಅನ್ಯಾಯವೆಸಗಿದಂತಾಗುತ್ತದೆ” ಎಂದು ಹೇಳಿದರು.
ಸಂಘಟನೆಯ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಜೆ ಎಂ ದೇವರಾಜ, ಜಿಲ್ಲಾ ಘಟಕ ಅಧ್ಯಕ್ಷ ಮಾನಪ್ಪ ಮೇಸ್ತ್ರೀ, ಪದಾಧಿಕಾರಿಗಳಾದ ದುಳ್ಳಯ್ಯ ಗುಂಜಳ್ಳಿ, ರಂಜೀತ್ ದಂಡೋರಾ ಇದ್ದರು.
