ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿಕಟಪೂರ್ವ ಆಡಳಿತ ವೈದ್ಯಾಧಿಕಾರಿ ಮತ್ತು ಹಾಲಿ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಕೀಲು ಮೂಳೆ ತಜ್ಞ ಕಳೆದ 2 ವರ್ಷಗಳಿಂದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಅವಧಿಯಲ್ಲಿ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಯುಷ್ಮಾನ್ ಯೋಜನೆಗಳ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ತನಿಖೆ ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಇದನ್ನು ಓದಿದ್ದೀರಾ? ಕೃಷ್ಣರಾಜಪೇಟೆ | ಡಿ.4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
ಮಂಡ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಹೆಚ್, ಜಿಲ್ಲಾ ಕುಟುಂಬ ನಿಯಂತ್ರಣಾಧಿಕಾರಿ ಡಾ.ಸೋಮಶೇಖರ್ ಎಂ.ಸಿ., ಡಿಎಚ್ಒ ಕಚೇರಿ ಅಧೀಕ್ಷಕ ಸುರೇಶ್ ಬಾಬು, ಪ್ರಥಮ ದರ್ಜೆ ಸಹಾಯಕರಾದ ಶಂಕರ್, ರವೀಶ್ ಹಾಗೂ ಜಿಆರ್ಸಿಎಚ್ ಅಧಿಕಾರಿಗಳ ಕಚೇರಿಯ ಸೋಮಶೇಖರ್ ಅವರನ್ನೊಳಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಲಾಗಿದೆ.
ಇದನ್ನು ನೋಡಿದ್ದೀರಾ? ಮಂಡ್ಯ | ಕನ್ನಂಬಾಡಿ ಕಟ್ಟಿದ ತಮಿಳರ ಎತ್ತಂಗಡಿ?
ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಎಬಿಆರ್ಕೆ ಮತ್ತು ಆರೋಗ್ಯ ರಕ್ಷಾ ನಿಧಿ ದುರ್ಬಳಕೆ ಮಾಡಿಕೊಂಡಿರುವ ಕುರಿತು ಕಳೆದ ನವೆಂಬರ್ 29ರಂದು ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ ಬಿ ನಾಗಣ್ಣಗೌಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಡಿಎಚ್ಒ ಡಾ.ಮೋಹನ್ ಅಕ್ರಮಗಳ ತನಿಖೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದ್ದಾರೆ.