ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಆರೋಪಿ ರಮೇಶ ಮರಿಯಪ್ಪಗೆ 10 ವರ್ಷ ಕಠಿಣ ಶಿಕ್ಷೆ ₹15,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರ ಏಪ್ರಿಲ್ನಲ್ಲಿ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯವು ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ₹15000 ದಂಡ ವಿಧಿಸಿ ಆದೇಶಿಸಿದೆ.
ಪ್ರಕರಣಕ್ಕೆ ಸಹಕರಿಸಿದ್ದ ಆರೋಪಿ ರಮೇಶ ಎಂಬಾತನ ತಂದೆ ಮುದಿಯಪ್ಪನಿಗೆ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ಸಿಪಿಐ ನಾಗರಾಜ ಎಂ ಕಮ್ಮಾರ ಆರೋಪಿತರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಳಪೆ ಗುಣಮಟ್ಟದ ಫರ್ನಿಚರ್ ಪೂರೈಕೆ; ಕಾರ್ಪೆಂಟರ್ಗೆ ₹20,000 ದಂಡ ವಿಧಿಸಿದ ನ್ಯಾಯಾಲಯ
ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಬಿ ಬಿ ಜಕಾತಿಯವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ಸಂತ್ರಸ್ತರ ಪರಿಹಾರ ನಿಧಿಯಿಂದ ₹4,50,000 ಪರಿಹಾರ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ ಮಂಜುನಾಥ ವಾದ ಮಂಡಿಸಿದ್ದಾರೆ.
