ತುಮಕೂರು ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಆರ್ ನಾರಾಯಣ ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 81 ವರ್ಷದ ಆರ್. ನಾರಾಯಣ ಅವರು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಎಸ್ಎಂ ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರ್ಕಾರ
ಕಾಂಗ್ರೆಸ್ನ ಟಿಕೆಟ್ನಲ್ಲಿ ಸ್ಪರ್ಧಿಸಿ ಬೆಳ್ಳಾವಿ ಕ್ಷೇತ್ರವನ್ನು ಒಟ್ಟು ಮೂರು ಬಾರಿ ಪ್ರತಿನಿಧಿಸಿದ್ದರು. 1989, 1994 ಮತ್ತು 1999ರಲ್ಲಿ ಬೆಳ್ಳಾವಿ ಕ್ಷೇತ್ರದ ಶಾಸಕರಾಗಿದ್ದರು.
ಇತ್ತೀಚೆಗೆ ನಿಧನರಾದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಧಿಕಾರವಧಿಯಲ್ಲಿ ನಾರಾಯಣ ಅವರು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ನಾರಾಯಣ ಅವರ ಅಂತಿಮ ದರ್ಶನಕ್ಕೆ ಗಾಂಧಿನಗರದ ನಿವಾಸದಲ್ಲಿ ಅವಕಾಶ ಮಾಡಿಕೊಡಲಾಗಿದೆ.
ಸಂತಾಪ ಸೂಚಿಸಿದ ಡಿಸಿಎಂ ಡಿಕೆಶಿ
ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ನಾರಾಯಣ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿದ್ದರು. ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರೂ ಆಗಿದ್ದರು. ಕೆಂಗಲ್ ಹನುಮಂತಯ್ಯ ಅವರ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ಶ್ರಮಿಸಿದವರು. ತಮ್ಮ ಅಚ್ಚುಕಟ್ಟುತನದಿಂದ ಕೂಡಿದ ಕೆಲಸಕ್ಕೆ ಹೆಸರಾಗಿದ್ದವರು” ಎಂದು ಹೇಳಿದ್ದಾರೆ.
“ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರಾಗಿದ್ದರು. ಕಾಂಗ್ರೆಸ್ ಪಕ್ಷದ ಏಳಿಗೆಗೆ ಇವರ ಕೊಡುಗೆ ಅಪಾರ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ದೂರವಾಗಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿಕೆಶಿ ತಿಳಿಸಿದ್ದಾರೆ.
