ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.
ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿಯಿಂದ ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
“ಮುಖ್ಯಮಂತ್ರಿಗಳು ಸ್ವಾಮೀಜಿ, ರೈತಾಪಿ ವರ್ಗದ ಧರಣಿ- ಹೋರಾಟದ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಬೇಕಿತ್ತು. ಆದರೆ ಅವರು ಮಾಡಿದ್ದೇನು? ಸುವರ್ಣಸೌಧದಲ್ಲಿ ಇದ್ದರೂ ಸಹ ಮುಖ್ಯಮಂತ್ರಿಗಳು ಮನಸ್ಸು ಮಾಡಲಿಲ್ಲ. ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡುವ ಸೌಜನ್ಯವನ್ನು ತೋರಲಿ. ಬದಲಾಗಿ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು, ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಆಗಿರುವುದು ಅಕ್ಷಮ್ಯ ಅಪರಾಧ” ಎಂದರು.
“ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಪಡೆಯುತ್ತೇವೆ. ದರ್ಪದಿಂದ ಮೆರೆದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ನಾವು ಮತ್ತು ಜಡಿಎಸ್ ಪಕ್ಷದವರು ಸದನದಲ್ಲಿ ಧ್ವನಿ ಎತ್ತುತ್ತೇವೆ” ಎಂದು ತಿಳಿಸಿದರು.
“ಕಾಂಗ್ರೆಸ್ ಸರಕಾರದವರು ಮೂರೂ ಬಿಟ್ಟಿದ್ದಾರೆ. 136 ಶಾಸಕರಿದ್ದೇವೆ; ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ. ಹಿಂದಿನ ಅವಧಿಯಲ್ಲೂ ಇದೇ ರೀತಿ ನಡೆದುಕೊಂಡಿದ್ದು, ಸಿಎಂ ಅವರನ್ನು ಸದನದಲ್ಲಿ ಪ್ರಶ್ನಿಸುತ್ತೇವೆ” ಎಂದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಆರಂಭವಾದ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯದ ಮಾಜಿ ಸಚಿವರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.