ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತಿಶ್ ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಅವರಿಗೆ ಮನವಿ ಸಲ್ಲಿಸಿದರು.
ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಿಂದ ಭತ್ತದ ವ್ಯಾಪಾರಿಗಳು ತೆಲಂಗಾಣ ರಾಜ್ಯಕ್ಕೆ ಹೋಗುವಾಗ ಶಕ್ತಿನಗರ ಚೆಕ್ಪೋಸ್ಟ್ ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ಜಲಾಲ್ಪೂರ ಚೆಕ್ ಪೋಸ್ಟ್ ನಲ್ಲಿ ಭತ್ತ ಲಾರಿಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಈಗಾಗಲೇ ಎರಡು ದಿನಗಳ ಹಿಂದೆ ಸುಮಾರು 5ರಿಂದ 6 ಲಾರಿಗಳನ್ನು ನಿಲ್ಲಿಸಿ ಕೃಷ್ಣ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಹಿನ್ನೆಲೆಯಲ್ಲಿ ರೈತರಿಗೆ ಭತ್ತದ ಸಾಗಾಣಿಕೆಗೆ ಸಮಸ್ಯೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿದಿನ ತೆಲಂಗಾಣ ರಾಜ್ಯದಿಂದ ರಾಯಚೂರು ಮಾರುಕಟ್ಟೆಗೆ 30ರಿಂದ 40 ಸಾವಿರ ಭತ್ತವೂ ಯಾವುದೇ ನಿರ್ಬಂಧವಿಲ್ಲ ಆವಕವಾಗುತ್ತಿವೆ. ಇದರಿಂದ ಸ್ಥಳೀಯ ಮಾರುಕಟ್ಟೆಯ ಭತ್ತದ ದರ ಕಡಿಮೆಯಾಗಿ ರೈತರಿಗೆ ನಷ್ಟವಾಗುತ್ತಿದೆ ಎಂದು ಸಮಸ್ಯೆ ವಿವರಿಸಿದರು.ಕಾರಣ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಿಸಲು ಹಾಕಿರುವ ನಿರ್ಬಂಧನೆಯನ್ನು ತೆರವುಗೊಳಿಸಬೇಕು, ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ, ಕೃಷ್ಣ ಸೇತುವೆ ಮೇಲೆ ರಸ್ತೆ ತಡೆ ಚಳುವಳಿ ನಡೆಸಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮುಂದುವರೆದ ಬಾಣಂತಿಯರ ಸಾವು; ಕಲಬುರಗಿಯಲ್ಲಿ ಮತ್ತೊಬ್ಬ ಬಾಣಂತಿ ಬಲಿ
ಸಂಘದ ರಾಜ್ಯ ಗೌರಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ, ಪದಾಧಿಕಾರಿಗಳಾದ ಮಲ್ಲಣ್ಣ ಗೌಡೂರು, ಮಲ್ಲಿಕಾರ್ಜುನರಾವ್, ವ್ಯಾಪಾರಿ ವೆಂಕಟೇಶ ಉಪಸ್ಥಿತರಿದ್ದರು.
