ಬೆಳಗಾವಿಯಲ್ಲಿ ಡಿ.26ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ಸಿಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದರು.
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಂಗಳವಾರ ನಡೆದ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.
“ಮಹಾತ್ಮಾ ಗಾಂಧೀಜಿ ಅವರು ಕೇವಲ ಒಂದು ಬಾರಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಈ ಅಧಿಕಾರವನ್ನು ಅವರು 1924ರ ಡಿ.26ರಂದು ಬೆಳಗಾವಿ ಅಧಿವೇಶನದಲ್ಲಿ ಸ್ವೀಕರಿಸಿದ್ದರು. ಈಗ ನಾವು 2024ರ ಡಿಸೆಂಬರ್ ತಿಂಗಳಲ್ಲಿದ್ದೇವೆ. ನೂರು ವರ್ಷಗಳು ತುಂಬಿರುವ ಈ ಕ್ಷಣವನ್ನು ಸಂಭ್ರಮಿಸಲು ಪ್ರತಿ ಕಾಂಗ್ರೆಸಿಗನಿಗೆ ಹೆಮ್ಮೆಯ ವಿಚಾರ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಅನೇಕ ಸಂದೇಶಗಳನ್ನು ಜನರಿಗೆ ನೀಡಿತ್ತು” ಎಂದು ಹೇಳಿದರು.
“ಕಾಂಗ್ರೆಸ್ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿ ಅವರ ಪರಂಪರೆ ಪ್ರತಿಯೊಬ್ಬ ಕಾಂಗ್ರೆಸಿಗನ ಮನದಲ್ಲಿದೆ. ಇಂದು ದೇಶದ ಪರಿಸ್ಥಿತಿ ನಮಗೆಲ್ಲ ಗೊತ್ತಿದೆ. ಮಹಾತ್ಮಾ ಗಾಂಧಿ ಅಹಿಂಸೆ ಬಗ್ಗೆ ಪ್ರತಿಪಾದನೆ ಮಾಡಿದರು. ಬ್ರಿಟಿಷರ ವಿರುದ್ಧ ಅಹಿಂಸೆ ಮಾರ್ಗದಲ್ಲಿ ಹೋರಾಡಿ ಪ್ರೀತಿ, ಸಮಾನತೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಈ ಎಲ್ಲವು ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಾಶವಾಗುತ್ತಿವೆ. ಈಗ ದೇಶದಲ್ಲಿ ಸಮಾನತೆ ಇಲ್ಲ. ಶ್ರೀಮಂತರು ಶ್ರೀಮಂತರಾಗಿ, ಬಡವರು ಕಡು ಬಡವರಾಗುತ್ತಿದ್ದಾರೆ. ಕೇವಲ ಒಬ್ಬ ವ್ಯಕ್ತಿಯ ಹಿತಾಸಕ್ತಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ” ಎಂದು ಟೀಕಿಸಿದರು.
“ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಲಾಗುತ್ತಿದೆ. ದೇಶದ ಎಲ್ಲ ಆಸ್ತಿಗಳು ಒಬ್ಬ ವ್ಯಕ್ತಿಯ ಕೈಗೆ ಸೇರುತ್ತಿದೆ. ಹೀಗಾಗಿ ಸಮಾನತೆ ಎಂಬುದೇ ದೇಶದಲ್ಲಿ ಇಲ್ಲವಾಗಿದೆ. ಪರಿಶಿಷ್ಟ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು ಸೇರಿದಂತೆ ಸಾಮಾನ್ಯ ವರ್ಗದ ಬಡವರಿಗೆ ರಕ್ಷಣೆ ಸಿಗಬೇಕು ಎಂಬ ಉದ್ದೇಶದಿಂದ ನಾವು ಜಾತಿಗಣತಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ನೂರು ವರ್ಷಗಳ ಹಿಂದೆ ಗಾಂಧೀಜಿ ಅವರು ಹೇಳಿದ್ದ ಸಮಾನತೆ ಬಗ್ಗೆ ನಾವು ಮಾತನಾಡುತ್ತಿದ್ದೇವೆ” ಎಂದರು.
“ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಅದೊಂದೆ ಅವರ ಅಜೆಂಡಾ. ಈಗ ಅವರು ಪ್ರಜಾಸತ್ತಾತ್ಮಕ ಮೌಲ್ಯವನ್ನೇ ಹೈಜಾಕ್ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಸಭೆ ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ನೀಡಲಿದೆ. ಬೆಳಗಾವಿಯಲ್ಲಿ ನಾವು ದೊಡ್ಡ ನಿರ್ಧಾರ ಮಾಡಬೇಕಿದೆ. ನಾವು ಮೋದಿ ಹಾಗೂ ಅಮಿತ್ ಶಾ ಅವರ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಸಭೆ ಬಹಳ ಪ್ರಮುಖವಾಗಿದೆ” ಎಂದು ಹೇಳಿದರು.
“ಬೃಹತ್ ಸಮಾವೇಶ ದಿನ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದು, ಇದೊಂದು ಮಹತ್ತರವಾದ ಸಭೆಯಾಗಲಿದೆ. ಅದೇ ದಿನ ಅದೇ ಸಮಯದಲ್ಲಿ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದಲೂ ಈ ಕ್ಷಣವನ್ನು ಆಚರಿಸುವಂತೆ ಎಐಸಿಸಿಯಿಂದ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಸರ್ಕಾರದ ವತಿಯಿಂದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ
“ಇದೇ ವೇಳೆ ಸರ್ಕಾರದ ವತಿಯಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಮಂಡಲದ ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಸಂಸತ್ತಿನ ಎರಡೂ ಸದನಗಳ ವಿರೋಧ ಪಕ್ಷಗಳ ನಾಯಕರು ಸೇರಿ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಸದರಿಗೆ ಆಹ್ವಾನ ನೀಡಲಾಗುವುದು. ಎಲ್ಲಾ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೂ ಆಹ್ವಾನ ನೀಡಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, “ಪಕ್ಷದ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬೇರೆ ಪಕ್ಷದವರಿಗೆ ಆಹ್ವಾನ ಇರುವುದಿಲ್ಲ. ಆದರೆ ಸರ್ಕಾರದ ವತಿಯಿಂದ ಮಾಡಲಾಗುತ್ತಿರುವ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದವರಿಗೆ ಆಹ್ವಾನ ನೀಡಲಾಗುವುದು” ಎಂದು ತಿಳಿಸಿದರು.
“ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕ್ಷಣಕ್ಕೆ ಶತಮಾನೋತ್ಸವದ ಸಂಭ್ರಮ ಕೇವಲ ಕರ್ನಾಟಕ ರಾಜ್ಯದ ಜನರಿಗೆ ಮಾತ್ರವಲ್ಲ, ಇಡೀ ದೇಶದ ಜನರಿಗೆ ಹೆಮ್ಮೆಯ ವಿಚಾರ. ಸೈದ್ಧಾಂತಿಕವಾಗಿ, ಸಾಮಾಜಿಕವಾಗಿ, ರಾಜಕೀಯ ಪರಿವರ್ತನೆಗಾಗಿ ಬಹಳ ಮಹತ್ನದ್ದಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಸೇರಿ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಬೆಳಗಾವಿ ಭೂಮಿಯಿಂದ ಬದಲಾವಣೆಯ ಹೊಸ ಸಂಕಲ್ಪ ಮಾಡಿ ಜನ ಕಲ್ಯಾಣದತ್ತ ಕಾಂಗ್ರೆಸ್ ಸಾಗಬೇಕಿದೆ” ಎಂದು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದರು.