ಶಿಕ್ಷಣ ತಜ್ಞ ಡಾ. ವಿ ಪಿ ನಿರಂಜನಾರಾಧ್ಯ ಅವರ ನೇತೃತ್ವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ಒಳಗೊಂಡ ಸಮಾನ ಮನಸ್ಕರ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಒಕ್ಕೂಟ, ರಾಜ್ಯದಲ್ಲಿ ಒಂದು ಪ್ರಜಾಸತ್ತಾತ್ಮಕ, ಜಾತ್ಯತೀತ ಮತ್ತು ಜನಪರ ಸರ್ಕಾರ ಆಸ್ತಿತ್ವಕ್ಕೆ ತರಬೇಕೆಂಬ ಜನರ ಜನಾದೇಶದ ಆಶಯಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಈ ಮೂಲಕ ಶಾಲಾ ಶಿಕ್ಷಣದ ವಿಷಯ ಆದ್ಯತೆಯ ವಿಷಯವಾಗುವ ಮೂಲಕ ನೆರೆಹೊರೆಯ ಸಮಾನ ಶಾಲೆಯ ಕಲ್ಪನೆ ಜಾರಿಗೊಳಿಸಬೇಕೆಂದು ತಿಳಿಸಿದೆ.

ನೂತನ ಶೈಕ್ಷಣಿಕ ನೀತಿಗೆ ಒಕ್ಕೂಟ ಹೊರಡಿಸಿರುವ ಪ್ರಮುಖ ಅಂಶಗಳು
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
- ಈಗಾಗಲೇ ಮುದ್ರಣವಾಗಿ ಬಿಇಒ ಕಚೇರಿಗಳು/ಶಾಲೆಗಳಿಗೆ ತಲುಪಿರುವ ಹಿಂದಿನ ಸರ್ಕಾರದ ಮನಸ್ಸನ್ನು ಕಲುಷಿತಗೊಳಿಸುವ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸದಿರಲು ಸ್ಪಷ್ಟ ಸೂಚನೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಬೇಕು. ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಪುಸ್ತಕಗಳಿಂದ ಕಡಿತಗೊಳಿಸಲು ಅಯಾ ವ್ಯಾಪ್ತಿಯ ಸಮೂಹ ಸಂಪನ್ಮೂಲ ಅಧಿಕಾರಿಗಳು ಮತ್ತು ಶಾಲೆಯ ಶಿಕ್ಷಕರನ್ನು ಹೊಣೆ ಮಾಡಬೇಕು. ಜೊತೆಗೆ, ಈ ವಿಷಯಗಳನ್ನು ಕಲಿಕೆ ಮತ್ತು ಮೌಲ್ಯಮಾಪನದಿಂದ ಕೈಬಿಡಲು ಸ್ಪಷ್ಟ ಸೂಚನೆ ನೀಡಬೇಕು. ಜೊತೆಗೆ, ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಕಡ್ಡಾಯವಾಗಿ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಅಳವಡಿಸಿಕೊಳ್ಳುವ ಮೂಲಕ ಅತ್ಯುತ್ತಮವಾಗಿ ಕಲಿಸುವಂತೆ ಸ್ಪಷ್ಟ ಮಾರ್ಗಸೂಚಿ ಹೊರಡಿಸುವುದು.
- ಕಳೆದ 4 – 5 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿ ಮಕ್ಕಳ ಕಲಿಕೆಯನ್ನು ಪೂರ್ಣವಾಗಿ ಹಳಿ ತಪ್ಪಿಸಿದೆ. ಹಿಂದಿನ ಸರ್ಕಾರದ ಪುಸ್ತಕಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿ ರಚಿಸಬೇಕು.
- 2021-22 ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿಯಿರುವ ಹುದ್ದೆಗಳ ಸಂಖ್ಯೆ ಸರಿ ಸುಮಾರು1,41,358 . ಈ ಪೈಕಿ 13,352 ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಶಾಲೆ ಪ್ರಾರಂಭವಾಗುವ ಮುನ್ನ ಅವರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸುವುದು.
- ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿ ಮಕ್ಕಳ ಕಲಿಕೆಯನ್ನು ಪೂರ್ಣವಾಗಿ ಹಳಿ ತಪ್ಪಿಸಿದೆ. 2021-22ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಸರಿ ಸುಮಾರು1,41,358. ಈ ಪೈಕಿ 13,352 ಖಾಯಂ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಮುಗಿದಿದ್ದು ಮುಂದಿನ ಒಂದು ವಾರದ ಒಳಗಾಗಿ ಈ ಶಿಕ್ಷಕರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸುವುದು.
- ಸರ್ಕಾರಿ ಶಾಲೆಯಲ್ಲಿ ಮಕ್ಕಳಿದ್ದರೂ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಈ ಖಾಯಂ ಶಿಕ್ಷಕರ ನೇಮಕವಾಗಬೇಕು. ಬಾಕಿ ಖಾಲಿ ಉಳಿಯುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಜೂನ್ 15ರ ಒಳಗಾಗಿ ನೇಮಿಸಿಕೊಳ್ಳಲು ತುರ್ತುಕ್ರಮ ವಹಿಸುವುದು. ಈ ಪ್ರಕ್ರಿಯೆಯನ್ನು ಶಾಲಾ ಹಂತದಲ್ಲಿ ಎಸ್ಡಿಎಂಸಿ ಹಾಗೂ ಶಿಕ್ಷಕರ ವ್ಯಾಪ್ತಿಯ ವಿವೇಚನೆಗೆ ಬಿಡಬೇಕು .ಇದನ್ನು ಸಂಬಂಧಿಸಿದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಮೇಲುಸ್ತುವಾರಿ ಮಾಡಬೇಕು.
- ಶಾಲೆ ಪ್ರಾರಂಭಕ್ಕೆ ಮುನ್ನ ಎಲ್ಲ ಮಕ್ಕಳಿಗೆ ದೊರೆಯಬೇಕಾದ ಉತ್ತೇಜಕಗಳಾದ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ಗಳನ್ನು ತಕ್ಷಣ ಸಕಾಲಕ್ಕೆ ಒದಗಿಸುವುದು. ಶಾಲಾ ಹಂತದಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ1 ರಿಂದ 12 ನೇ ತರಗತಿಯವರೆಗೆ ಕಲಿಯುತ್ತಿರುವ ಎಲ್ಲ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುವುದು.
- ಕಳೆದ ಮೂರ್ನಾಲ್ಕು ವರ್ಷಗಳಿಂದ ಶಾಲಾ ಅನುದಾನಗಳು ಪೂರ್ಣ ಪ್ರಮಾಣದಲ್ಲಿ ಬಾರದಿರುವುದರಿಂದ ಸೀಮೇಸುಣ್ಣ- ಬಿಳಿಯ ಹಾಳೆಗಳು ಸೇರಿದಂತೆ ಮುಂತಾದ ವಸ್ತುಗಳ ಖರೀದಿಯೂ ಕಷ್ಟವಾಗಿದ್ದು, ತಕ್ಷಣ ಶಾಲಾ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಬೇಕು.
- ಸರ್ಕಾರಿ ಶಾಲೆಗಳಲ್ಲಿ ಬಳಸುವ ವಿದ್ಯುಚ್ಛಕ್ತಿ ಹಾಗೂ ನೀರಿನ ಬಳಕೆಯ ಪಾವತಿಗಳ ಹಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮನ್ನಾ ಮಾಡುವುದು. ಪ್ರೌಢ ಶಿಕ್ಷಣ ಮುಂದುವರಿಸಲು ಅನುಕೂಲವಾಗುವಂತೆ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್ ವಿತರಣೆ ಕಳೆದ ನಾಲ್ಕು ವರ್ಷಗಳಿಂದ (2019-2000) ಸ್ಥಗಿತವಾಗಿದ್ದು, ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ. ಆದ್ದರಿಂದ, ಕೂಡಲೇ ಮಕ್ಕಳಿಗೆ ಬೈಸಿಕಲ್ ವಿತರಿಸುವ ಪ್ರಕ್ರಿಯೆ ಪ್ರಾರಂಭಿಸಬೇಕು.
- ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜೂನ್ ಒಂದರೊಳಗೆ ಎಲ್ಲಾ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಪುನರಾರಂಭಗೊಳ್ಳುವಂತೆ ತಕ್ಷಣ ಕ್ರಮ ವಹಿಸುವುದು.
- ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಮಕ್ಕಳ ಶೌಚಾಲಯ, ತರಗತಿ ಕೋಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಪ್ರಥಮ ಆದ್ಯತೆಯಾಗಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತೀ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಇಂದಿರಾ ಕ್ಯಾಂಟೀನ್ನಲ್ಲಿ ಅಥವಾ ಅದೇ ಮಾದರಿಯಲ್ಲಿ ಮಧ್ಯಾಹ್ನದ ಉಚಿತ ಬಿಸಿಯೂಟ ಒದಗಿಸಬೇಕು.
- ಸಂವಿಧಾನದಲ್ಲಿನ ಮೂಲಭೂತ ಹಕ್ಕಾಗಿರುವ 21ಎ ಅನ್ನು ಕೊಡಮಾಡುವ ಶಿಕ್ಷಣದ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಿಗದಿತ ಸಮಯದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಕಾಲಮಿತಿ ಯೋಜನೆ ರೂಪಿಸಬೇಕು. ಯಾವುದೇ ನೆಪಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಪೂರ್ಣವಾಗಿ ನಿಲ್ಲಿಸುವುದು. ಕನಿಷ್ಠ 12ನೇ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
- ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಮತ್ತು ಸೂಕ್ತ ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಖಜಾನೆಗೆ ಕೋಟ್ಯಂತರ ನಷ್ಟ ಮಾಡಿದ ಹಿಂದಿನ ಪಠ್ಯಪರಿಷ್ಕರಣೆ ಸಮಿತಿಯ ಅಧ್ಯಕ್ಷರು ಮತ್ತು ತಂಡದ ಸದಸ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜೊತೆಗೆ, ಲಕ್ಷಾಂತರ ಸಂಖ್ಯೆಯಲ್ಲಿ ಮುದ್ರಣವಾಗಿದ್ದ ಕನ್ನಡ ಹಾಗೂ ಇತಿಹಾಸದ ಪುಸ್ತಕಗಳ ಸರಬರಾಜನ್ನು ಸ್ಥಗಿತಗೊಳಿಸುವ ಮೂಲಕ ಪೋಲು ಮಾಡಿದ ಕೋಟ್ಯಂತರ ಸಾರ್ವಜನಿಕರ ಹಣವನ್ನು ಅವರಿಂದಲೇ ವಸೂಲು ಮಾಡಬೇಕು.
- ಮಕ್ಕಳಿಗೆ ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರ ಯೋಜನೆಯನ್ನು ಜಾರಿಗೊಳಿಸುವುದು ಹಾಗೂ ರಾಜ್ಯದಲ್ಲಿ ಅಪೌಷ್ಠಿಕತೆ ತೊಡೆದು ಹಾಕಲು ಅಂಗನವಾಡಿಯಿಂದ 10ನೇ ತರಗತಿಯ ಎಲ್ಲ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಶಾಲಾ ಹಂತದಲ್ಲಿ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಲು ಪರಿಣಾಮಕಾರಿ ತರಬೇತಿ ಒದಗಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇ 20ರಷ್ಟು ಮೀಸಲಿಡಬೇಕು.

ಉನ್ನತ ಹಾಗೂ ಕಾಲೇಜು ಹಂತದ ಶಿಕ್ಷಣ
- ಕೇಂದ್ರ ಸರ್ಕಾರ ಅಸಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕವಾಗಿ ಪಾರದರ್ಶಕತೆಯಿಲ್ಲದೆ ಗೌಪ್ಯವಾಗಿ ಸಂವಿಧಾನ ಪ್ರತಿಪಾದಿಸುವ ಬಹುತ್ವದ ರಾಷ್ಟ್ರೀಯತೆಗೆ ಬದಲಾಗಿ ಧರ್ಮಾಧಾರಿತ ಕೋಮುವಾದಿ ನೆಲೆಯ ಹಿಂದುತ್ವ ರಾಷ್ಟ್ರೀಯತೆಯನ್ನು ಸಾಧಿಸಲು ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಸಾರಾಸಗಟಾಗಿ ತಿರಸ್ಕರಿಸುವ ನಿರ್ಣಯ ಕೈಗೊಳ್ಳಬೇಕು. ಅದನ್ನು ಒಕ್ಕೂಟ ಸರಕಾರಕ್ಕೆ ಅಧಿಕೃತವಾಗಿ ತಿಳಿಸಬೇಕು. ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವುದನ್ನು ಒಕ್ಕೂಟ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು.
- ಈ ನೀತಿಯನ್ವಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ಜಾರಿಯಾಗಿರುವ ಎಲ್ಲವನ್ನೂ ಸ್ಥಗಿತಗೊಳಿಸಿ ನೀತಿ ಜಾರಿಗೆ ಮುನ್ನ ಇದ್ದ ಯಥಾಸ್ಥಿತಿಯನ್ನು ಮುಂದುವರಿಸಬೇಕು. ಎಲ್ಲ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಬೇಕು.
- ವಿಶ್ವವಿದ್ಯಾಲಯದ ವಿವಿಧ ಹಂತದಲ್ಲಿನ ಪ್ರಾತಿನಿಧಿಕ ಸಂಸ್ಥೆಗಳಿಗೆ, ಸೆನೆಟ್, ಸಿಂಡಿಕೇಡ್, ಅಕಾಡೆಮಿಕ್ ಕೌನ್ಸಿಲ್, ಇತ್ಯಾದಿಗಳಿಗೆ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೂಲಕ ಅರ್ಹ ಮತ್ತು ವೃತ್ತಿ ನೈಪುಣ್ಯತೆಯ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ವಿಶ್ವವಿದ್ಯಾಲಯಗಳಿಗೆ ಕುಲಪತಿ ಹಾಗೂ ಕುಲಸಚಿವರನ್ನು ಆಯ್ಕೆ ಮಾಡುವಾಗ ವಿಷಯ ಪರಿಣಿತರು ಮತ್ತು ಪ್ರಾಮಾಣಿಕರನ್ನು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಮೌಲ್ಯಗಳಲ್ಲಿ ಪೂರ್ಣ ನಂಬಿಕೆ ಇರುವವರನ್ನು ಆಯ್ಕೆ ಮಾಡಬೇಕು.
- ಖಾಸಗಿ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ಅಣಬೆಯಂತೆ ತೆರೆಯಲು ನೀಡುವ ಅನುಮತಿಯನ್ನು ಸ್ಥಗಿತಗೊಳಿಸಿ, ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಬಲವರ್ಧನೆಗೊಳಿಸಲು ಮತ್ತು ವಿಸ್ತರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು.
- ಸಂವಿಧಾನದ ಆಶಯದಂತೆ ಸಾರ್ವಜನಿಕ ಶಿಕ್ಷಣವನ್ನು ಸಮಗ್ರವಾಗಿ ಬದಲಾಯಿಸಿ ಎಲ್ಲ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಡಬಲ್ಲ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ, ಜಾರಿಗೊಳಿಸಿ ಮತ್ತು ನಿರಂತರ ಮೌಲ್ಯಾಂಕನ ಮೂಲಕ ಸಮಾನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲು ಶಾಶ್ವತ ರಾಜ್ಯ ಶಿಕ್ಷಣ ಆಯೋಗ /ಪ್ರಾಧಿಕಾರ ಸ್ಥಾಪಿಸಬೇಕು.