ರಾಯಚೂರು ನಗರದಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದರ ಜತೆಗೆ ಮದ್ಯ ಮಾರಾಟ, ಜೂಜಾಟ, ಮಟ್ಕಾ ಚೀಟಿ ಹಾಗೂ ಮರಳು ಗಣಿಗಾರಿಕೆಯತಹ ಅಕ್ರಮಗಳು ಎಗ್ಗಿಲ್ಲದೇ ನಡೆಯುತ್ತಿದ್ದರೂ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಪುಟ್ಟಮಾದಯ್ಯ ಅವರಿಗೆ ಸಮುದಾಯದ ಮುಖಂಡರು ಅಹವಾಲು ಸಲ್ಲಿಸಿದರು.
ರಾಯಚೂರು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಎಸ್ಸಿ/ಎಸ್ಟಿ ಸಮುದಾಯಗಳ ಕುಂದು ಕೊರತೆ ಸಭೆಯಲ್ಲಿ ದಲಿತ ಮುಖಂಡರು ತಮ್ಮ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಎಸ್ಪಿ ಪುಟ್ಟಮಾದಯ್ಯ ಅವರಿಗೆ ಅಹವಾಲು ನೀಡಿದರು.
“ನಗರದ ಸ್ಲಂ ಪ್ರದೇಶಗಳಲ್ಲಿ ಸಿ ಎಚ್ ಪೌಡರ್ ಸೇಂದಿ ಮಾರಾಟ ನಡೆಯುತ್ತಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ದಲಿತ ಮುಖಂಡರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

“ಮರಳು ಸಾಗಣೆ ಮಾಡುವ ಟಿಪ್ಪರ್ಗಳು ಅಡ್ಡಾದಿಡ್ಡಿಯಾಗಿ ರಸ್ತೆಯಲ್ಲಿ ಓಡಾಡುತ್ತಿವೆ. ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವೇಳೆ ಬದಲಾವಣೆ ಮಾಡಿ ನಿರ್ಬಂಧ ಹೇರಬೇಕು. ಜಿಲ್ಲೆಯ ಹಲವೆಡೆ ಹೋಟೆಲ್, ದೇವಸ್ಥಾನಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿದೆ. ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದ ಬಗ್ಗೆ ಹಲವು ಬಾರಿ ದೂರು ಸಲ್ಲಿಸಲಾಗಿದೆ. ಆದರೆ ಯಾವುದೇ ಕ್ರಮವಾಗಿಲ್ಲ. ತಾವಾದರೂ ಸೂಕ್ತ ಕ್ರಮ ವಹಿಸಬೇಕು” ಎಂದು ದಲಿತಪರ ಸಂಘಟನೆಗಳ ಮುಖಂಡರು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮನುವಾದ, ಫ್ಯಾಸಿಸ್ಟ್ ವಿರುದ್ಧ ಜ.1ರಂದು ಪ್ರತಿಭಟನೆ
ಈ ಸಂದರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಹರೀಶ, ಡಿವೈಎಸ್ಪಿ ಸತ್ಯನಾರಾಯಣರಾವ್, ತಹಶೀಲ್ದಾರ್ ಸುರೇಶ್ ವರ್ಮಾ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ, ಅರಣ್ಯ ಇಲಾಖೆ ಅಧಿಕಾರಿ ಪ್ರವೀಣ, ಅಬಕಾರಿ ಇಲಾಖೆಯ ಅಧಿಕಾರಿ, ಸಮುದಾಯದ ಮುಖಂಡರಾದ ಕೆ ಇ ಕುಮಾರ, ಹನುಮಂತಪ್ಪ ಕಾಕರಗಲ್, ಮಾರೆಪ್ಪ, ಎನ್ ಮಹಾವೀರ್ ಇದ್ದರು.
