‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಿ. ಸದ್ಯ ನಾಯಕತ್ವ ಮತ್ತು ರಾಜಕೀಯ ಕಾರ್ಯಸೂಚಿ ಬಗ್ಗೆ ಸ್ಪಷ್ಟತೆಯ ಕೊರತೆ ಇರುವುದರಿಂದ ಮೈತ್ರಿಕೂಟವನ್ನು ವಿಸರ್ಜಿಸುವುದು ಉತ್ತಮ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಗಾಗಿ ಮಾತ್ರ ‘ಇಂಡಿಯಾ’ ಮೈತ್ರಿಕೂಟವನ್ನು ರಚನೆ ಮಾಡಿದ್ದರೆ, ಅದನ್ನು ವಿಸರ್ಜಿಸುವುದು ಅನಿವಾರ್ಯ. ದೆಹಲಿ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ’ ಎಂದು ಅವರು ತಿಳಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ರಾಜಕೀಯ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅಬ್ದುಲ್ಲಾ, ‘ಈ ಬಗ್ಗೆ ನಾನು ಏನನ್ನೂ ಹೇಳಲಾರೆ, ಏಕೆಂದರೆ ನಮಗೂ ದೆಹಲಿ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಎಎಪಿ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಬಿಜೆಪಿಯನ್ನು ಹೇಗೆ ಎದುರಿಸಬೇಕೆಂದು ನಿರ್ಧರಿಸಬೇಕು. ಒಂದು ವೇಳೆ ‘ಇಂಡಿಯಾ’ ಮೈತ್ರಿಕೂಟವನ್ನು ಕೇವಲ ಲೋಕಸಭೆ ಚುನಾವಣೆ ಸಲುವಾಗಿ ಮಾತ್ರ ರಚಿಸಿದ್ದರೆ ಒಕ್ಕೂಟವನ್ನು ವಿಸರ್ಜಿಸಬೇಕು ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ
“ನನಗೆ ನೆನಪಿರುವಂತೆ ‘ಇಂಡಿಯಾ’ ಮೈತ್ರಿಕೂಟಕ್ಕೆ ಯಾವುದೇ ಕಾಲಮಿತಿ ಎಂಬುದು ಇರಲಿಲ್ಲ. ಆದರೆ, ಲೋಕಸಭೆ ಚುನಾವಣೆ ಬಳಿಕ ಇದುವರೆಗೆ ಯಾವುದೇ ಸಭೆ ನಡೆಯದಿರುವುದು ದುರದೃಷ್ಟಕರ. ಮೈತ್ರಿಕೂಟವನ್ನು ಯಾರು ಮುನ್ನಡೆಸುತ್ತಾರೆ? ಅಜೆಂಡಾ ಏನು? ಮೈತ್ರಿ ಹೇಗೆ ಮುಂದುವರಿಯುತ್ತದೆ? ನಾವು ಒಗ್ಗಟ್ಟಾಗಿ ಇರುತ್ತೇವೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ’ ಎಂದು ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದರು.
2024ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ –ಕಾಂಗ್ರೆಸ್ ಮೈತ್ರಿಕೂಟ ಸರಳ ಬಹುಮತ ಪಡೆದು ಸರ್ಕಾರ ರಚಿಸಿದೆ.
