ಬೆಳಗಾವಿ ನಗರದಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಥೆ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದಾಗ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಟಿ.ಎ.ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಆ ಹಿನ್ನೆಲೆ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು, ಮಹಾನಗರ ಪಾಲಿಕೆ ಕಚೇರಿಯವರೆಗೆ ಮೆರವಣಿಗೆ ನಡೆಸಿ, ನಾಡ ದ್ರೋಹಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದು ಘೋಷಣೆ ಕೂಗಿದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಥೆ ನಾಡವಿರೋಧಿ ಘೋಷಣೆ ಕೂಗಿದ್ದಾರೆ. ಆದರೆ, ಅದೇ ಕಾರ್ಯಕ್ರಮದಲ್ಲಿದ್ದ ಶಾಸಕ ಅಭಯ ಪಾಟೀಲ್, ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚವ್ಹಾಣ ಸುಮ್ಮನಿದ್ದದ್ದು ಸರಿಯಲ್ಲ. ಅವರೆಲ್ಲರ ಸದಸ್ಯತ್ವ ರದ್ದುಗೊಳಿಸಬೇಕು. ಬೆಳಗಾವಿ ಪಾಲಿಕೆಯನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿದರು.
ಈ ವರದಿ ಓದಿದ್ದೀರಾ? ಬೆಳಗಾವಿ | ಜನನಿಬಿಡ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ
ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಪ್ರಚೋದನಕಾರಿ ಹೇಳಿಕೆ ನೀಡಿ, ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಲೇ ಇದ್ದಾರೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಘಟಕದ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ ನೇತೃತ್ವ ವಹಿಸಿದ್ದರು.