ಜನತಾ ದರ್ಶನದಲ್ಲಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ʼಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ನಿಮಿತ್ಯ ಪ್ರತಿ ತಿಂಗಳು ಒಂದೊಂದು ತಾಲ್ಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸುತ್ತಿದ್ದು, ಕಾನೂನಿನ ಚೌಕಟ್ಟಿನಲ್ಲಿ ಬರುವ ಎಲ್ಲ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿಯಾಗಲಿವೆ ಸಾರ್ವಜನಿಕರು ಆತಂಕಪಡಬೇಕಿಲ್ಲ’ ಎಂದರು.
‘ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನಿಯಮಾನುಸಾರ ಅರ್ಹತೆ ಆಧಾರದ ಮೇಲೆ ನೇಮಕ ಆಗಲಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಜನರು ಮಧ್ಯವರ್ತಿಗಳಿಗೆ ಅನಾವಶ್ಯಕವಾಗಿ ದುಡ್ಡು ನೀಡಬಾರದುʼ ಎಂದು ಹೇಳಿದರು.

ʼಕ್ಷೇತ್ರದಲ್ಲಿ 2023-24ನೆಯ ಸಾಲಿನಲ್ಲಿ ಶಾಲಾ-ಕಾಲೇಜು, ಆಸ್ಪತ್ರೆ ಕಟ್ಟಡ, ರಸ್ತೆ, ಸಿಸಿ ರಸ್ತೆ, ಚರಂಡಿ ಸೇರಿ ಮುಂತಾದ ಅಭಿವೃದ್ಧಿ ಕಾರ್ಯಗಳಿಗೆ ನೂರಾರು ಕೋಟಿ ಅನುದಾನ ಒದಗಿಸಲಾಗಿದ್ದು, ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಸರಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೇ ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದವರಿಗೆ ಗ್ಯಾರಂಟಿ ಯೋಜನೆಯ ಜನಪ್ರಿಯತೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲದೊಂದು ಆರೋಪ ಮಾಡುತ್ತ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ’ ಎಂದು ಹೇಳಿದರು.
ಜನತಾ ದರ್ಶನದಲ್ಲಿ ಒಟ್ಟು 94 ಅರ್ಜಿಗಳು ಬಂದಿದ್ದು, ಗ್ರಾಮೀಣ ಮುಖ್ಯ ರಸ್ತೆ, ಚರಂಡಿ, ನಿವೇಶನ ಮತ್ತು ಮನೆ, ವಿದ್ಯಾರ್ಥಿ ವೇತನ, ಓಪನ ಜಿಮ್ ಇನ್ನಿತರ ಸಮಸ್ಯೆಗಳನ್ನು ಆಲಿಸಿ ಕೂಡಲೇ ಇತ್ಯರ್ಥಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ʼಈ ಹಿಂದಿನ ಜನತಾ ದರ್ಶನದಲ್ಲಿ 1,419 ಅರ್ಜಿಗಳು ಬಂದಿದ್ದು, ಅದರಲ್ಲಿ 531 ಅರ್ಜಿಗಳ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಇನ್ನು 888 ಅರ್ಜಿಗಳ ಸಮಸ್ಯೆಗಳನ್ನು ಇತ್ಯರ್ಥ ಮಾಡಲಾಗುತ್ತಿದೆʼ ಎಂದರು.

ಇದೇ ಸಂದರ್ಭದಲ್ಲಿ ಸಚಿವರು ಬಸವಕಲ್ಯಾಣ ತಾಲ್ಲೂಕಿನ ಗುಣತಿರ್ಥವಾಡಿಯ ದೌರ್ಜನ್ಯಕ್ಕೊಳಗಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂತ್ರಸ್ಥರಿಗೆ 4.12 ಲಕ್ಷ ಹಾಗೂ ಭಾಲ್ಕಿ ತಾಲ್ಲೂಕಿನ ಚಂಡಕಾಪೂರದ ದೌರ್ಜನ್ಯಕ್ಕೊಳಗಾದ ಸಂತ್ರಸ್ಥರಿಗೆ 3.12 ಲಕ್ಷ ಪರಿಹಾರ ಧನ ಚೆಕ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಎಸ್ಪಿ ಪ್ರದೀಪ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ, ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಹಣಮಂತರಾವ ಚವ್ಹಾಣ, ಲೋಕೋಪಯೋಗಿ ಇಲಾಖೆಯ ಇಇ ಶಿವಶಂಕರ ಕಾಮಶೆಟ್ಟಿ, ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಗ್ರಾಪಂ ಅಧ್ಯಕ್ಷ ಮಹಾಂತೇಶ ಪಾಟೀಲ್, ಉಪಾಧ್ಯಕ್ಷೆ ಗೋದಾವರಿ ಇದ್ದರು.
ಜಿಪ್ಸನ್ ಕೋಟೆ ಸಂಗಡಿಗರು ನಾಡಗೀತೆ ನಡೆಸಿಕೊಟ್ಟರು. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು
ಎಲ್ಲ ತಾಲೂಕುಗಳಲ್ಲಿ ಹೈಟೆಕ್ ಶಾಲೆ ಕಟ್ಟಡ :
‘ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಗತ್ಯಗನುಗುಣವಾಗಿ ಸರಕಾರಿ ಶಾಲೆಗಳಿಗೆ ಹೈಟೆಕ್ ಕಟ್ಟಡ ಒದಗಿಸಿ ಕೊಡುವುದಾಗಿ ಸಚಿವರು ಹೇಳಿದರು. ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಶಾಲೆಯ ಜಮೀನು ಆಧರಿಸಿ ಕಟ್ಟಡ ಸೌಲಭ್ಯ ಒದಗಿಸಲಾಗುವುದು. ಕಾನ್ವೆಂಟ್ ಮಾದರಿಯಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಎನ್ನುವುದು ನನ್ನ ಕಳಕಳಿಯಾಗಿದೆ’ ಎಂದರು.
‘ಭಾಲ್ಕಿ ತಾಲೂಕಿನ ಮೇಹಕರ್, ಖಟಕ್ ಚಿಂಚೋಳಿ ಮತ್ತು ಬ್ಯಾಲಹಳ್ಳಿ ಗ್ರಾಮದಲ್ಲಿ ಹೈಟೆಕ್ ಶಾಲೆಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

₹6.5 ಕೋಟಿ ವೆಚ್ಚದ ಕಟ್ಟಡ ಉದ್ಘಾಟನೆ :
ಜನತಾ ದರ್ಶನ ಕಾರ್ಯಕ್ರಮಕ್ಕೂ ಮುನ್ನ ಭಾತಂಬ್ರಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನೂತನವಾಗಿ ಕೆಕೆಆರ್ಡಿಬಿಯ ₹1.80 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಆಸ್ಪತ್ರೆಯ ನೂತನ ಕಟ್ಟಡ ಮತ್ತು ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ₹4.70 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಹೈಟೆಕ್ ಶಾಲೆಯ ಕಟ್ಟಡ ಉದ್ಘಾಟಿಸಿ ಆರೋಗ್ಯ ಮತ್ತು ಶಿಕ್ಷಣದ ಸದುಪಯೋಗಕ್ಕೆ ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ರಾಜಾಶ್ರಯ ಇಲ್ಲದೇ ರಚಿತಗೊಂಡಿದ್ದು ವಚನ ಸಾಹಿತ್ಯ : ಶಿವಕುಮಾರ್ ಕಟ್ಟೆ
ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿ ಇಡೀ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಂದಿದೆ. ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.