ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಬೆದರಿಕೆ ಕರೆ ಬಂದಿದೆ. ರಾಮೇಶ್ವರಂ ಕೆಫೆ ರೀತಿ ಬಾಂಬ್ ಸ್ಫೋಟ ಮಾಡುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಗಣರಾಜ್ಯೋತ್ಸವದಂದು ನಗರದ ಆರು ಜನ ಗಣ್ಯರ ಮನೆ ಸ್ಪೋಟಿಸುವುದಾಗಿ ಹೇಳಿದ್ದಾನೆ.
ಈ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದೀಗ ಬಂದ ಮಾಹಿತಿ ಪ್ರಕಾರ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜನವರಿ 9 ರಂದು ಸಂಜೆ ಬೆಂಗಳೂರಿನ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ಗೆ ಕರೆ ಮಾಡಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಪೋಟ ಮಾಡುವುದಾಗಿ ಹುಸಿ ಬಾಂಬ್ ಕರೆ ಬಂದಿದೆ. ಇದೊಂದು ಹುಸಿ ಬಾಂಬ್ ಕರೆಯಾದರೂ ಸಹ ಮುನ್ನೆಚ್ಚರಿಕೆಯಾಗಿ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ
ಇನ್ನು ಅಪರಿಚಿತ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಆರು ಜನರ ಹೆಸರು, ವಿಳಾಸವನ್ನು ಆಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಇನ್ನು ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಗಣರಾಜ್ಯೋತ್ಸವಕ್ಕೂ ಮುನ್ನ ಬೆಂಗಳೂರು ಪೊಲೀಸ್ ಆಯುಕ್ತರ ನಿಯಂತ್ರಣ ಕೊಠಡಿಗೆ ಬಂದ ಹುಸಿ ಬಾಂಬ್ ಬೆದರಿಕೆ ಕರೆ ಭದ್ರತಾ ಕಳವಳ ಹುಟ್ಟುಹಾಕಿದೆ.
ಗಣರಾಜ್ಯೋತ್ಸವ ಮುನ್ನವೇ ಈ ರೀತಿ ಬೆದರಿಕೆ ಬಂದಿದ್ದು, ಪೊಲೀಸ್ ಇಲಾಖೆಯನ್ನು ತಲ್ಲಣಗೊಳಸಿದೆ. ಹೀಗಾಗಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರಿನಾದ್ಯಂತ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಮುಂದಾಗಿದೆ.