- ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು
- ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ
ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರ್ಕಾರ’ವನ್ನು ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಷರತ್ತುಸಹಿತವಾಗಿ ಘೋಷಣೆ ಮಾಡಲಾಗಿರುವ ಐದು ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.
“ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಮತ್ತು ಅವರ ಜತೆ ನಿಲ್ಲುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
“ಹಾಲಿ ಮುಖ್ಯಮಂತ್ರಿ 2013-18ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 2.75 ಲಕ್ಷದಷ್ಟು ಸರ್ಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು” ಎಂದಿದ್ದಾರೆ.
“ಮುಗ್ಧ ಯುವಜನರಿಗೆ ರೂ. 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ” ಎಂದು ಕಿಡಿಕಾರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಇದೆ : ಕಾಂಗ್ರೆಸ್ ಟೀಕೆ
“ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯವಾಗಿ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ” ಎಂದಿದ್ದಾರೆ.