ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ ಕುಟುಂಬ ಸದಸ್ಯರಿಗೆ ತಲಾ ₹30 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈವರೆಗೆ ಅದನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ನಡೆ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ದಾವಣಗೆರೆಯ ತಾಹೀರ್ ಹುಸೈನ್ ಮತ್ತು ರಾಯಚೂರಿನ ಅಜೀಜ್ ಪಾಷಾ ಜಾಗೀರದಾರ್ ಅವರು ಸಲ್ಲಿಸಿರುವ ಸಾರ್ವಜನಿಕ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ವಿ ಕಾಮೇಶ್ವರ ರಾವ್ ಮತ್ತು ಎಸ್ ರಾಚಯ್ಯ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಪಿ ಉಸ್ಮಾನ್, “ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ಈವರೆಗೂ ₹30 ಲಕ್ಷ ಪರಿಹಾರವನ್ನು ನೀಡಿಲ್ಲ” ಎಂದು ವಾದ ಮಂಡಿಸಿದರು.
ವಾದ ಆಲಿಸಿದ ಪೀಠವು ಜನವರಿ 27ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.
ಈ ಸುದ್ದಿ ಓದಿದ್ದೀರಾ?: ಕೋವಿಡ್ನಿಂದ ಮೃತಪಟ್ಟ ವೈದ್ಯರ ಕುಟುಂಬಕ್ಕೆ ಪರಿಹಾರ; ಮಾಹಿತಿ ನೀಡಲು ಕೇಂದ್ರ ನಕಾರ
ಕೊರೊನಾದಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ತಲಾ ₹30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆಬ್ರವರಿ 10ರಂದು ಸುತ್ತೋಲೆ ಹೊರಡಿಸಿತ್ತು. ಮಾಹಿತಿ ಹಕ್ಕು ಕಾಯಿದೆ ಅಡಿ ಪಡೆದ ಮಾಹಿತಿ ಪ್ರಕಾರ 2020ರ ಮಾರ್ಚ್ನಿಂದ 2021ರ ಜೂನ್ವರಗೆ ಕೊರೊನಾದಿಂದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಸಾರಿಗೆ ನಿಗಮಗಳ ನೌಕರರು ಕೋವಿಡ್ನಿಂದ ಮೃತಪಟ್ಟ ಪ್ರಕರಣಗಳ ಸಂಬಂಧ ಮೃತ ನೌಕರರ ಕುಟುಂಬ ಸದಸ್ಯರು ಅಥವಾ ಅವಲಂಬಿತರಿಗೆ ಯಾವುದೇ ವಿಳಂಬವಿಲ್ಲದೆ ಕೂಡಲೇ ಪರಿಹಾರ ಹಣವನ್ನು ಪಾವತಿಸುವುದನ್ನು ಖಾತರಿಪಡಿಸಬೇಕು. ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ವಿತರಿಸಲು ಅಗತ್ಯ ಹಣಕಾಸು ಬಿಡುಗಡೆ ಮಾಡಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು” ಎಂದು ಅರ್ಜಿದಾರರು ಕೋರಿದ್ದಾರೆ.
