ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡ ಇಂದು (ಜ.14) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತ್ತು. ಅಲ್ಲದೇ ಗೋಪೂಜೆಯನ್ನೂ ನೆರವೇರಿಸಿ ದನದ ಮಾಲೀಕನಿಗೆ ಧೈರ್ಯ ತುಂಬಿತು.
“ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ” ಎಂದು ವಿಜಯೇಂದ್ರ ಖಂಡಿಸಿದರು. “ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ” ಎಂದು ಅವರು ತಿಳಿಸಿದರು.
“ಯಾರೋ ಬಡಪಾಯಿಯನ್ನು ತಂದು ಅವನೇ ಮಾಡಿದ್ದಾಗಿ ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ. ಬಡ ಕುಟುಂಬದಿಂದ ಬಂದ ಹಸುವಿನ ಮಾಲೀಕರು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ, ಗೋಪೂಜೆ ಮಾಡಿದ್ದೇವೆ” ಎಂದರು.
ಇದೊಂದು ಧರ್ಮಯುದ್ಧ: ಆರ್ ಅಶೋಕ್
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಹಿಂದೂ-ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಗೂಂಡಾಗಿರಿ ಸರಕಾರ, ತಾಲಿಬಾನ್ ಸರಕಾರ ಇಲ್ಲಿದೆ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು” ಎಂದು ಟೀಕಿಸಿದರು.
“ಆರೋಪಿ ಮತಿಭ್ರಮಣೆಗೆ ಒಳಗಾದವ ಎಂದು ಕಾಂಗ್ರೆಸ್ಸಿಗರು ಕಥೆ ಹೆಣೆದಿದ್ದಾರೆ. ಆತ 10 ವರ್ಷಗಳಿಂದ ಅವರ ಅಣ್ಣನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ. ಆತ ಮದ್ಯಪಾನ ಮಾಡಿದ್ದರೆ ಅಷ್ಟು ಹೊತ್ತು ಬಾರ್ ತೆರೆದಿರಲು ಹೇಗೆ ಸಾಧ್ಯ? ಮುಂಜಾನೆ 3 ಅಥವಾ 4ರ ಹೊತ್ತಿಗೆ ಇಂಥ ದುಷ್ಕೃತ್ಯ ಮಾಡಲು ಹೇಗೆ ಸಾಧ್ಯ? ಸುಮಾರು 500 ಕೋಟಿಗೂ ಹೆಚ್ಚು ಮೌಲ್ಯದ ಜಾಗದ ದನದ ಆಸ್ಪತ್ರೆ ಇಲ್ಲಿದೆ. ಈ ಜಾಗವನ್ನು ಸರಕಾರವು ವಕ್ಫ್ ಬೋರ್ಡಿಗೆ ನೀಡಿದೆ. ಅದರ ವಿರುದ್ಧ ಹೋರಾಟ ಮಾಡಿದವರಲ್ಲಿ ಮುಂಚೂಣಿಯಲ್ಲಿ ಕರ್ಣ ಇದ್ದು, ಕರ್ಣನ ಹಸುಗಳ ಕೆಚ್ಚಲು ಕತ್ತರಿಸುವ ಮೂಲಕ ಕರ್ಣನಿಗೂ ಎಚ್ಚರಿಕೆ ನೀಡಿದ್ದಾರೆ” ಎಂದರು.
“ಒಬ್ಬರೇ ಮಾಡಿದ ಕೃತ್ಯ ಇದಲ್ಲ. ಇದರ ಹಿಂದಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದೊಂದು ಧರ್ಮಯುದ್ಧ; ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ಕೊಡಲಿದೆ” ಎಂದು ಪ್ರಕಟಿಸಿದರು.
ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.