ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗೃತಾ ಕ್ರಮ ಅನುಸರಿಸುವಂತೆ ಎನ್ಡಿಆರ್ಎಫ್ ಇನ್ಸ್ಪೆಕ್ಟರ್ ಅಜಯ ಕುಮಾರ್ ಸಲಹೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
“ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ಆಗಮಿಸಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಭವನೀಯ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಗ್ರಾಮಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ತಿಳಿದುಕೊಳ್ಳಬೇಕು” ಎಂದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕೃತಿ ವಿಕೋಪದಿಂದಾಗುವ ಅನಾಹುತ, ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ ಸೇರಿದಂತೆ ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದಾಗುವ ಅನಾಹುತಗಳು ಮತ್ತು ಇನ್ನಿತರ ಅನಾಹುತಗಳಿಂದ ಸಾರ್ವಜನಿಕರು ಯಾವ ರೀತಿ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಎನ್ಡಿಆರ್ಎಫ್ ತಂಡದ ಸದಸ್ಯ ವಜ್ರಚೇತನ ಅವರು ಮಾಹಿತಿ ನೀಡಿದರು. ಎನ್ಡಿಆರ್ಎಫ್ ತಂಡದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಅಣಕು ಪ್ರದರ್ಶನ ನೀಡಿ ಅರಿವು ಮೂಡಿಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಚಾಕೊಲೇಟ್ ತೋರಿಸಿ 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ
ಲಕ್ಷ್ಮೀದೇವಿ, ಎನ್ಡಿಆರ್ಎಫ್, ಎಎಸ್ಐ ಸೋಮ್ ಬಿರ್ ಕುಮಾರ್, ಕಂದಾಯ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ, ಆನೆಗೊಂದಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಗ್ರಾಪಂ ಸದಸ್ಯರು, ಸುಶೀಲಾಬಾಯಿ, ಶಾಲಾ ಶಿಕ್ಷಕರು, ಎನ್ಡಿಆರ್ಎಫ್ ತಂಡದ ಸದಸ್ಯರು, ತಾಲೂಕು ಪಂಚಾಯತ್ ಅಧಿಕಾರಿಗಳು, ವಿದ್ಯಾರ್ಥಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.