ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದು, ಸಾಲ ವಸೂಲಿ ಮಾಡುವಾಗ ನೀಡಿದ ಯಾವುದೇ ರೀತಿಯ ದೌರ್ಜನ್ಯ /ಕಿರುಕುಳದ ವಿರುದ್ಧ ನೊಂದವರು ದೂರು ಕೊಟ್ಟರೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಶಿವಮೊಗ್ಗ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.
ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ-ಬಿ ಉಪ ವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ಫೈನಾನ್ಸ್ ಕಂಪನಿಗಳ ವಿರುದ್ಧ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಬಂದು ನೇರವಾಗಿ ದೂರು ನೀಡಬಹುದು. ದೂರು ನೀಡಲು ಹೋದಾಗ ಯಾವುದೇ ಅಧಿಕಾರಿ ದೂರು ತೆಗೆದುಕೊಳ್ಳಲು ತಡಮಾಡಿದರೆ/ನಿರಾಕರಿಸಿದರೆ ಪೊಲೀಸ್ ಇಲಾಖಾ ಮೇಲಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಬಹುದಾಗಿರುತ್ತದೆ” ಎಂದರು.
“ನಗರ ಹಾಗೂ ಗ್ರಾಮೀಣ ವ್ಯಾಪ್ತಿಗಳಲ್ಲಿ ಹೆಚ್ಚುವರಿ ಪೊಲೀಸ್ ಗಸ್ತು ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದ್ದು, ಅಪರಾಧ ಕೃತ್ಯ ಎಸಗುವ ಸಮಾಜ ಘಾತುಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಬೀಟ್ ವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡುವ ಸಂಬಂಧ ಸ್ಮಾರ್ಟ್ ಇ–ಬೀಟ್ ತಂತ್ರಾಂಶವನ್ನು ಅನುಷ್ಠಾನ ಮಾಡಲಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ತಮ್ಮ ತಮ್ಮ ಠಾಣಾ ವ್ಯಾಪ್ತಿಯ ಬೀಟ್ ಅನ್ನು ಮೇಲ್ವಿಚಾರಣೆ ಮಾಡಬೇಕು” ಎಂದು ತಿಳಿಸಿದರು.

“ಮಾದಕ ವಸ್ತು, ಗಾಂಜಾ ಮಾರಾಟ, ಸಾಗಾಟ, ಸಂಗ್ರಹ, ಬೆಳೆಯುವುದು ಮತ್ತು ಸೇವನೆ ಮಾಡುವುದು ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇದ್ದಲ್ಲಿ, ಹತ್ತಿರದ ಪೊಲೀಸ್ ಠಾಣೆ ಅಥವಾ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ. ಅಂತಹವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದರಿಂದ ಯಾವುದೇ ಭಯವಿಲ್ಲದೆ ಮುಕ್ತವಾಗಿ ಮಾಹಿತಿ ಹಂಚಿಕೊಳ್ಳಿ” ಎಂದರು.
“ಶಿವಮೊಗ್ಗ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಂಬಂಧ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿರುತ್ತದೆ ಹಾಗೂ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಿದ್ದು, ಪೊಲೀಸ್ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿರುತ್ತದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಐಎಂವಿ ಕಾಯ್ದೆ ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ವೀಲಿಂಗ್ ಮಾಡಿದ ಚಾಲಕನಿಗೆ ಬಿತ್ತು ₹5000 ದಂಡ
ಈ ವೇಳೆ ಶಿವಮೊಗ್ಗ-ಬಿ ಉಪವಿಭಾಗ ಡಿವೈಎಸ್ಪಿ ಸಂಜೀವ್ ಕುಮಾರ್ ಟಿ, ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ, ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಸತ್ಯನಾರಾಯಣ್, ವಿನೋಬನಗರ ಪೊಲೀಸ್ ಠಾಣೆ ಪಿಐ ಚಂದ್ರಕಲಾ ಪಿಐ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರು ಉಪಸ್ಥಿತರಿದ್ದರು.
