ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ವಿಜ್ಞಾನ ಕೇಂದ್ರ (ವಿಮ್ಸ್)ದಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದೆ. ನಿನ್ನೆ (ಫೆ.4) ಮಧ್ಯಾಹ್ನ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಮೂಲದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.
ರೇಷ್ಮಾ ಗೌಸ್ಫೀರ್ (20) ಎಂಬುವವರಿಗೆ ಜ. 4ರಂದು ಸಿಜೇರಿಯನ್ ಹೆರಿಗೆ ಮಾಡಲಾಗಿತ್ತು. ನಾಲ್ಕು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದರು. ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಜ. 14 ರಂದು ಮತ್ತೆ ವಿಮ್ಸ್ಗೆ ದಾಖಲಿಸಿ ಕೃತಕ ಉಸಿರಾಟದಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತಾದರೂ, ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇತ್ತ ವೈದ್ಯರ ನಿರ್ಲಕ್ಷ್ಯವೇ ರೇಷ್ಮಾ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಪೊಲೀಸರಿಂದಲೇ ದೌರ್ಜನ್ಯ; ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘದಿಂದ ಪ್ರತಿಭಟನೆ
ಈ ಕುರಿತು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ, “ರೇಷ್ಮಾ ಅವರಿಗೆ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಸಿಜೇರಿಯನ್ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವೂ ಎಲ್ಲ ರೀತಿಯ ಚಿಕಿತ್ಸೆಗಳನ್ನು ನೀಡಿದ್ದೆವು” ಎಂದು ಪ್ರತಿಕ್ರಿಯಿಸಿದರು.
