- ಶ್ರೀಮಂತರ ಹಿತ ಕಾಯುವ ಬಿಜೆಪಿಯವರಿಗೆ ನಮ್ಮ ಕಾಳಜಿ ಸಹಿಸಲು ಆಗುತ್ತಿಲ್ಲ
- ನುಡಿದಂತೆ ನಡೆಯುವುದು ನಮ್ಮ ಸಂಸ್ಕಾರ, ಗೇಲಿ ಮಾಡುವುದು ಬಿಜೆಪಿ ಸಂಸ್ಕಾರ
ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೆ ವಿದ್ಯುತ್ ದರ ಇದ್ದಕ್ಕಿದ್ದಂತೆ ಏರಿಕೆಯಾಗಿದ್ದು, ಸಾರ್ವಜನಿಕರಿಂದ ವ್ಯಾಪಕ ಪ್ರತಿರೋಧ ವ್ಯಕ್ತವಾಗುತ್ತಿದೆ. ವಿದ್ಯುತ್ ದರ ಏರಿಕೆಯ ನಿಜವಾದ ಹಿನ್ನೆಲೆ ಏನೆನ್ನುವ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈಗ ಸ್ಪಷ್ಟನೆ ನಿಡಿದ್ದಾರೆ.
ರಾಜ್ಯ ಸರ್ಕಾರದ ಮಹತ್ವದ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಬಳಿಕ ವಿಧಾನಸೌಧದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಶಿಫಾರಸ್ಸಿನಂತೆ ಮೊನ್ನೆ ವಿದ್ಯುತ್ ದರ ಹೆಚ್ಚಳವಾಗಿದೆ. ಆದರೆ, ನಾವೇ ವಿದ್ಯುತ್ ದರ ಹೆಚ್ಚಿಸಿದೆವು ಎನ್ನುವ ಪರಮ ಸುಳ್ಳನ್ನು ಬಿಜೆಪಿ ಪರಿವಾರ ಹರಡಿಸುತ್ತಿದೆ. ಮೇ 12ರಿಂದ ವಿದ್ಯುತ್ ದರ ಏರಿಕೆ ಎಂದು ಏಪ್ರಿಲ್ ನಲ್ಲೇ ತೀರ್ಮಾನ ಆಗಿತ್ತು” ಎಂದು ತಿಳಿಸಿದರು.
“ಗ್ಯಾರಂಟಿ ಯೋಜನೆಯಿಂದ ವಿಪಕ್ಷಗಳಿಗೆ ನಡುಕ ಶುರುವಾಗಿದೆ. ಬೇಕಾದಷ್ಟು ಟೀಕೆಗಳ ಸುರಿಮಳೇ ಸುರಿಸಿದ್ದಾರೆ. ಅವರು ಗೇಲಿ ಮಾಡಿಕೊಂಡು ಅಲ್ಲಿಯೇ ಇರಲಿ. ನಮ್ಮ ಗ್ಯಾರಂಟಿ ಮುಂದುವರಿಸಿಕೊಂಡು ನಾವು ಮುಂದೆ ಹೋಗುತ್ತೇವೆ. ಜುಲೈ 1ರಿಂದ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಆಗಲಿದೆ. 200 ಯೂನಿಟ್ಯೊಳಗೆ ವಿದ್ಯುತ್ ಬಳಸಿದರೆ ಬಿಲ್ ಬರುವುದಿಲ್ಲ. ಗೊಂದಲ ಸೃಷ್ಟಿ ಮಾಡುವುದೇ ಬಿಜೆಪಿಯವರ ಕೆಲಸ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಡವರ, ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆ ವೇಗ ಪಡೆದುಕೊಳ್ಳುತ್ತದೆ. ಶ್ರೀಮಂತರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆಗೆ ಅಷ್ಟು ಲಾಭ ಆಗುವುದಿಲ್ಲ. ಆದ್ದರಿಂದ ನಾವು ಬಡವರು, ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದರು.
“ಬರೀ ಶ್ರೀಮಂತರ ಹಿತ ಕಾಯುವ ಬಿಜೆಪಿಯವರಿಗೆ ನಮ್ಮ ಕಾಳಜಿ ಸಹಿಸಲು ಆಗುತ್ತಿಲ್ಲ. ನಮ್ಮ ಗುರಿ ಜನರ ಸಂಕಷ್ಟ ತಗ್ಗಿಸುವುದು. ಪ್ರಮಾಣ ವಚನ ಸ್ವೀಕರಿಸಿ ಕೇವಲ 20 ದಿನಗಳಲ್ಲಿ ಮೊದಲ ಗ್ಯಾರಂಟಿ ಜಾರಿಯಾಗಿ ನಾಡಿನ ಸಮಸ್ತ ಮಹಿಳೆಯರು ಇದರ ಅನುಕೂಲ ಪಡೆಯಲು ಶುರು ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಏಕಕಾಲಕ್ಕೆ ಶಕ್ತಿ ಯೋಜನೆ ಜಾರಿ ಆಗಿದೆ” ಎಂದು ಹೇಳಿದರು.
“ಈ 20 ದಿನಗಳಲ್ಲಿ ಬಿಜೆಪಿ ಪರಿವಾರ ಸುಳ್ಳಿನ ಮಹಾಪೂರವನ್ನೇ ಹರಿಸಿತು. ನಾವು ವಿಚಲಿತರಾಗಲಿಲ್ಲ. ನಮ್ಮ ಗುರಿ “ನುಡಿದಂತೆ ನಡೆಯುವುದಾಗಿತ್ತು”. ಅದನ್ನು ಮಾಡಿದ್ದೇವೆ. ಮಹಿಳೆಯರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಈ ಯೋಜನೆಗೆ “ಶಕ್ತಿ” ಎಂದು ಹೆಸರಿಡಲಾಗಿದೆ. ದೇಶದ ಅರ್ಧದಷ್ಟಿರುವ ಮಹಿಳೆಯರು ಅಭಿವೃದ್ಧಿಯಲ್ಲಿ ಪಾಲುದಾರರಾಗದೆ ದೇಶದ ಪ್ರಗತಿ ಸಾಧ್ಯವಿಲ್ಲ. ಭಾರತದಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಕಡಿಮೆ ಆಗಿದೆ. ಈ ಪ್ರಮಾಣ ಹೆಚ್ಚಾಗಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ವಿದ್ಯುತ್ ದರ ಹೆಚ್ಚಳವಾಗಲು ಕಾರಣಗಳೇನು? ಇಲ್ಲಿದೆ ಮಾಹಿತಿ
“ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರ ಅನುಕೂಲ ಮಾಡಿದರೆ ಬಿಜೆಪಿಯವರು ಸುಳ್ಳುಗಳ ಮೂಲಕ ಗುಲ್ಲೆಬ್ಬಿಸಿ ಗೊಂದಲ ಸೃಷ್ಟಿಸುತ್ತಾರೆ. ಮಾಧ್ಯಮದವರು ಬಿಜೆಪಿಯವರ ಜತೆ ಸೇರಿ ಗೊಂದಲ ಹೆಚ್ಚಿಸಬಾರದು” ಎಂದು ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ ಜೆ ಜಾರ್ಜ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಪರಿಷತ್ ಸದಸ್ಯ ನಾಗರಾಜ ಯಾದವ್, ಕಾಂಗ್ರೆಸ್ ಮುಖಂಡರಾದ ರೇವಣ್ಣ, ಯು ಬಿ ವೆಂಕಟೇಶ್ ಸೇರಿ ಇತರರು ಉಪಸ್ಥಿತರಿದ್ದರು.
ನಿಮಗೆ shifaras ವಾಪಸ್ ಪಡೆಯಲು ಆಗುವುದಿಲ್ಲವೇ ?