ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಿಸಲು ವಿಶೇಷ ಗಮನ ಹರಿಸಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಮನವಿ ಮಾಡಿದರು.
ಬೇಗುವಳ್ಳಿಯ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಲ್ಲಿ ಶ್ರೇಷ್ಠ ದರ್ಜೆಯ ಶಿಕ್ಷಕರಿದ್ದಾರೆ. ಈಗಾಗಲೇ ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀರು ಮತ್ತು ವಿದ್ಯುತ್ತನ್ನು ಏಕಕಾಲಕ್ಕೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ಅವರು ವ್ಯಾಸಂಗ ಮಾಡಿದ ಹೆಮ್ಮೆಯ ಶಾಲೆ ಇದಾಗಿರುವುದು ವಿಶೇಷವಾಗಿದೆ. ಈ ಶಾಲೆಯ ಕೊಠಡಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು.
ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರ ಕೊರತೆ ನೀಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.

ರಾಜ್ಯದ ಪ್ರತಿ ಮನೆಯಲ್ಲೂ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳಿರುವುದು ಸಂತಸದ ಸಂಗತಿಯಾಗಿದೆ. ಅಜೀಮ್ ಪ್ರೇಮ್ ಜಿ ಅವರ ಫೌಂಡೇಶನ್ ನೀಡಿದ 1591 ಕೋಟಿ ರೂಗಳ ಆರ್ಥಿಕ ನೆರವಿನೊಂದಿಗೆ ಶಾಲೆಯ ಎಲ್ಲಾ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಬಿಸಿ ಊಟದ ಜೊತೆಗೆ ಪೌಷ್ಟಿಕ ಆಹಾರ, ಮೊಟ್ಟೆ, ಹಾಲು ವಿತರಿಸಲಾಗುತ್ತಿದೆ ಎಂದರು.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರು ಮಾತನಾಡಿ, ಸರ್ಕಾರವು ನೂತನವಾಗಿ ಅನುಷ್ಠಾನಗೊಳಿಸಿರುವ ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಅಲ್ಲದೆ ಮಂಡಳಿಯಿಂದ ಹಾಗೂ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ?:ತೀರ್ಥಹಳ್ಳಿ | ಭೀಕರ ಅಪಘಾತ; ಕಾರಿನಡಿ ಸಿಲುಕಿ ಮಹಿಳೆ ಸಾವು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
