ಮುಂಬರುವ ದಿನಗಳಲ್ಲಿ ಎಲ್ಲ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವಂತಹ ಹೊಸ ದೃಷ್ಟಿಕೋನದ ಹೊಸ ಯೋಜನೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರೂಪಿಸಬೇಕು. ಕೆಲವೇ ಸಮುದಾಯಗಳಿಗೆ ಸೀಮಿತವಾಗದೆ ಎಲ್ಲ ಸಮುದಾಯದ ಜನರಿಗೆ ಯೋಜನೆಗಳು ತಲುಪಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಾನಾ ನಿಗಮ, ಮಂಡಳಿಗಳ ಅಧಿಕಾರಿಗಳೊಂದಿಗೆ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. “ಸ್ವಯಂ ಉದ್ಯೋಗ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ನಿರುದ್ಯೋಗಿ ಯುವಜನರಿಗೆ ಜೀವನೋಪಾಯಕ್ಕೆ ದಾರಿಯಾಗುತ್ತದೆ” ಎಂದು ಅವರು ಸೂಚಿಸಿದರು.
“ಬಡಜನರು, ರೈತರು ಹಾಗೂ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ಹೊಸ ದೃಷ್ಟಿಯ ಯೋಜನೆಗಳನ್ನು ರೂಪಿಸಬೇಕು. ಯೋಜನೆಗಳ ಅನುಷ್ಠಾನ ಪರಿಣಾಮಕಾರಿಯಾಗಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು” ಎಂದು ಹೇಳಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಇಲಾಖೆ ಆಯುಕ್ತ ಕೆ.ಎ ದಯಾನಂದ ಹಾಗೂ ವಿವಿಧ ನಿಗಮ, ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.