2023ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಮತ ಎಣಿಕೆ ವಿವಾದದ ಸಂಬಂಧ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣಾ ಎಣಿಕೆಯಲ್ಲಿ ಅಚಾತುರ್ಯ ನಡೆದಿದೆ ಎಂದು ಆರೋಪಿಸಿದ್ದ ಸೌಮ್ಯಾ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಕೋರಿಕೆ ಮೇರೆಗೆ ಮತ ಎಣಿಕೆಗೆ ಸಂಬಂಧಿಸಿದ ಡಿವಿಡಿ ಮತ್ತು ಚುನಾವಣಾ ದಾಖಲೆಗಳನ್ನು ರೆಕಾರ್ಡ್ನಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ರಾಮಮೂರ್ತಿ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, “ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಹೇಳಿದೆ. ಲಿಖಿತ ಹೇಳಿಕೆ ಸಲ್ಲಿಸುವಂತೆ ರಾಮಮೂರ್ತಿ ಅವರಿಗೆ ಸೂಚನೆ ನೀಡಿದೆ.
2023ರ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಸೌಮ್ಯಾ ರೆಡ್ಡಿ ಕೇವಲ 16 ಮತಗಳ ಅಂತರದಿಂಂದ ರಾಮಮೂರ್ತಿ ವಿರುದ್ಧ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂದು ಸೌಮ್ಯಾ ರೆಡ್ಡಿ ಆರೋಪಿಸಿದ್ದರು. ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
“ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ” ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.
ಅವರ ಅರ್ಜಿಯನ್ನು ಆಲಿಸಿದ್ದ ಹೈಕೋರ್ಟ್, ಡಿವಿಡಿ ಸೇರಿದಂತೆ 10 ಪ್ರಮುಖ ದಾಖಲೆಗಳನ್ನು ಹಾಜರುಪಡಿಸಲು ಫೆ.14ರಂದು ಅನುಮತಿ ನೀಡಿತ್ತು.