ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಮತ್ತೊಮ್ಮೆ ಸುದ್ದಿಯಲ್ಲಿದೆ. ಇದಕ್ಕೆ ಸದ್ಯ ಚರ್ಚೆಗೆ ಕಾರಣವಾದದ್ದು ಕನ್ನಡದ ಯೂಟ್ಯೂಬರ್ ಸಮೀರ್ ಎಂಡಿ ಎಐ ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ವಿಡಿಯೋ.
2012ರಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿದ್ದ ಸೌಜನ್ಯ ಪ್ರಕರಣದ ಬಗ್ಗೆ ಕನ್ನಡದ ಯೂಟ್ಯೂಬರ್ ಸಮೀರ್ ಎಂಬುವವರು ಫೆ.27ರಂದು ಸುಮಾರು 40 ನಿಮಿಷಗಳ ವಿಡಿಯೋವೊಂದನ್ನು ಮಾಡಿ, ಪ್ರಕರಣವನ್ನು ದಾಖಲೆ ಸಹಿತ ವಿವರಿಸಿದ್ದರು. ಈ ವಿಡಿಯೋ ಈಗಾಗಲೇ ಸೋಷಿಯಲ್ ಮೀಡಿಯಾ ಸೇರಿದಂತೆ ಮಾಧ್ಯಮಗಳಲ್ಲೂ ಕೂಡ ಚರ್ಚೆಗೆ ಗ್ರಾಸವಾಗಿದೆ.
ಫೆ.27ರಂದು ಅಪ್ಲೋಡ್ ಆಗಿರುವ ಸಮೀರ್ ಅವರ ಈ ವಿಡಿಯೋವನ್ನು ಈಗಾಗಲೇ 1 ಕೋಟಿ 20 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು, ಕನ್ನಡದ ಯೂಟ್ಯೂಬ್ ಇತಿಹಾಸದಲ್ಲೇ ಭಾರೀ ಚರ್ಚೆಯೂ ಹುಟ್ಟು ಹಾಕಿದೆ.
ಈ ಎಲ್ಲ ಬೆಳವಣಿಗೆಯ ನಡುವೆಯೇ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಕಳುಹಿಸಿದ್ದಾರೆ.

ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಮೀರ್ ಮಾಡಿರುವ ವಿಡಿಯೋ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರದೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ನಿರ್ಲಕ್ಷ್ಯ ವಹಿಸಿವೆ. ಈ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ – ವಿರೋಧದ ಚರ್ಚೆ ಹುಟ್ಟಿಕೊಂಡಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ ಎಂದು ಎಡಿಜಿಪಿ ಫ್ಯಾಕ್ಸ್ ಮೂಲಕ ಸಂದೇಶ ರವಾನಿಸಿದ್ದಾರೆ.
ಫ್ಯಾಕ್ಸ್ ಸಂದೇಶದಲ್ಲಿ, ‘ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟಿದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ. ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ನಿಮ್ಮ Social Media Monitoring Cell ಗಳನ್ನು ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ಇವರಿಗೆ ಮಾಹಿತಿ ನೀಡಬೇಕು’ ಎಂದು ಸೂಚನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ ಏನು?
ಮೃತ ಸೌಜನ್ಯ ಉಜಿರೆಯ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಆಕೆಯನ್ನು 2012ರ ಅಕ್ಟೋಬರ್ 10 ರಂದು ಅತ್ಯಾಚಾರ ನಡೆಸಿ ಕೊಲೆಗೈಯಲಾಗಿತ್ತು. ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಕಾಡಿನಲ್ಲಿ ಈ ಕೃತ್ಯ ನಡೆದಿತ್ತು. ಈ ಘಟನೆ ರಾಷ್ಟ್ರದಾದ್ಯಂತ ಭಾರೀ ಸುದ್ದಿಯಾಗಿ ಜನಾಕ್ರೋಶ ವ್ಯಕ್ತವಾಗಿತ್ತು.
ಘಟನೆ ಬಳಿಕ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬಂಧಿಸಿದ್ದರು. ಮಾನಸಿಕ ಸ್ಥಿಮಿತ ಕಳೆದುಕೊಂಡು ಕೃತ್ಯ ನಡೆಸಿದ್ದ ಎನ್ನಲಾಗಿತ್ತು. ಆರೋಪಿಯು ಜಾಮೀನುನಲ್ಲಿ ಬಿಡುಗಡೆಗೊಂಡಿದ್ದ. ಹಲವು ಹೋರಾಟದ ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಆದರೆ, ಸಿಬಿಐ ನ್ಯಾಯಾಲಯ ತೀರ್ಪು ಪ್ರಕಟಿಸಿ, ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಹೇಳಿತ್ತು. ಹಾಗಾದರೆ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದವರು ಯಾರು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
