ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಎಸ್ಎಫ್ಐ ಆಗ್ರಹಿಸಿದೆ.
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಿಗಿ ಅವರನ್ನು ಎಸ್ಎಫ್ಐ ರಾಜ್ಯ ನಿಯೋಗ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ತಡವಾದಲ್ಲಿ ಗ್ರಾಮೀಣ ಭಾಗದ ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಸರಿಯಾಗಿ ತೆರಳಲು ಆಗುವುದಿಲ್ಲ. ಇದರಿಂದ ಅಧ್ಯಯನದಲ್ಲಿ ತೊಡಗಲು ಕಷ್ಟವಾಗುತ್ತದೆ ಎಂದು ಸಚಿವರಿಗೆ ವಿವರಿಸಿದರು.
ರಾಜ್ಯದಲ್ಲಿ ಬಹುತೇಕ ಕಡೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ಹಾಗೂ ವೃತ್ತಿಪರ ವಸತಿ ನಿಲಯಗಳು ಇಲ್ಲ. ಹಾಗಾಗಿ ತೀರಾ ಅಗತ್ಯ ಮತ್ತು ಅನಿವಾರ್ಯ ಇರುವ ಪ್ರದೇಶಗಳಾದ ಕೊಪ್ಪಳ ಜಿಲ್ಲೆಯ ಕನಕಗಿರಿ, ಕಾರಟಗಿ, ಶ್ರೀರಾಮನಗರ, ಕುಷ್ಟಿಗಿ ಮತ್ತು ಧಾರವಾಡ, ರಾಯಚೂರು ಜಿಲ್ಲೆಯ ಸಿರವಾರ, ಕವಿತಾಳ, ದೇವದುರ್ಗ, ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಗದಗ ಜಿಲ್ಲೆಯ ಗಜೇಂದ್ರಗಡ, ಮೈಸೂರು, ಹೊಸಪೇಟೆ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ಹೊಸ ವಸತಿ ನಿಲಯಗಳನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ಬ್ಲಾಕ್ಮೇಲ್; ಎಬಿವಿಪಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ
ಶಿಥಿಲಾವಸ್ಥೆಯಲ್ಲಿರುವ ಹಾಸ್ಟೆಲ್ ಗಳನ್ನು ನವೀಕರಣ ಮಾಡಬೇಕು ಮತ್ತು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಹಾಸ್ಟೆಲ್ಗಳಿಗೆ ಹೊಸ ಕಟ್ಟಡ ಮಂಜೂರು ಮಾಡಬೇಕು. ಹಾಸ್ಟೆಲ್ಗೆ ಗ್ರಂಥಾಲಯ ಸೇರಿ ಆಗತ್ಯ ಇರುವ ಮೂಲ ಸೌಕರ್ಯ ಒದಗಿಸಬೇಕು. ಧಾರವಾಡದಲ್ಲಿ ಮೆಟ್ರಿಕ್ ನಂತರದ ಹಾಸ್ಟೆಲ್ ಆಯ್ಕೆಯ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ನಿಯೋಗದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ, ರಾಜ್ಯ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಮುಖಂಡ ಮನುಕುಮಾರ್ ಇದ್ದರು.