ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಹಿರಿಯ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರ ಸಮಿತಿ ರಚನೆ ಮಡಿದೆ.
ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ಆರೋಪಿ ರನ್ಯಾ ರಾವ್ ಅವರು ಪೊಲಿಸ್ ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯ ಐಪಿಎಸ್ ವೃಂದದ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಸಂಗತಿಗಳು ಹಾಗೂ ಸಂದರ್ಭಗಳು ಮತ್ತು ಈ ಪ್ರಕರಣದಲ್ಲಿ ಕಂಡು ಬಂದರೆ ಪತ್ತೆ ಹಚ್ಚಿ, ತನಿಖಾ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಸದರಿ ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ಎಲ್ಲ ರೀತಿಯ ನೆರವನ್ನು ನೀಡಲು ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರು(ಪೊಲೀಸ್ ಪಡೆಗಳ ಮುಖ್ಯಸ್ಥರು), ಕರ್ನಾಟಕ ರಾಜ್ಯ ಮತ್ತು ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೂ ಸೂಚಿಸಲಾಗಿದೆ.
ರನ್ಯಾ ರಾವ್ ಅವರು ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ಅವರು ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಈ ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾಗಿದೆ.
ಉನ್ನತ ಅಧಿಕಾರಿಗಳಿಗೆ ವಿಮಾನ ನಿಲ್ದಾಣಗಳಲ್ಲಿ ನೀಡಲಾಗುವ ಶಿಷ್ಟಾಚಾರಗಳನ್ನು ರಾಮಚಂದ್ರರಾವ್ ಹೆಸರು ಬಳಕೆ ಮಾಡಿಕೊಂಡು ಮತ್ತು ಅವರಿಗೆ ನೀಡುವ ಶಿಷ್ಟಾಚಾರ ಸೇವೆಗಳನ್ನು ರನ್ಯಾ ರಾವ್ ದುರ್ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗಳನ್ನು ತಪ್ಪಿಸಿಕೊಂಡು ಅಕ್ರಮ ಕೃತ್ಯಗಳನ್ನು ನಡೆಸಿದ್ದಾರೆ.