ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘ ಸ್ಥಾಪಿಸಲು ಹೊರಗುತ್ತಿಗೆ ಕಾರ್ಮಿಕರ ನೊಂದಣಿಗಾಗಿ ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
” ಬೀದರ್ ಜಿಲ್ಲೆಯಲ್ಲಿ ಹೊರಗುತ್ತಿಗೆ ನೌಕರರ ಶ್ರೇಯೋಭಿವೃದ್ಧಿಗೆ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘವನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಥಾಪನೆ ಮಾಡಲಾಗಿದೆ. ಹೊರಗುತ್ತಿಗೆ ನೌಕರರಿಗೆ ಅವಶ್ಯ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಸಂಘ ರಚಿಸಲು ಸರ್ಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳು, ನಗರ, ಸ್ಥಳೀಯ ಸಂಸ್ಥೆಗಳು, ನಿಗಮ ಮಂಡಳಿಗಳಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ನೌಕರರ ಮಾಹಿತಿಯನ್ನು ಮೂರು ದಿನದೊಳಗೆ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎರಡೂವರೆ ಸಾವಿರದಿಂದ 3 ಸಾವಿರ ಹೊರಗುತ್ತಿಗೆ ನೌಕರರು ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೂ ಆಡಳಿತ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ನಿಗದಿತ ಕಾಲಮಿತಿಯಲ್ಲಿ ಇಎಸ್ಐ ಹಾಗೂ ಪಿಎಫ್ ಹಣ ಪಾವತಿಯಾಗದಿರಬಹುದು. ಅದರಲ್ಲೂ, ಮಹಿಳಾ ನೌಕರರಿಗೆ ಅಧಿಕಾರಿಗಳು, ಇತರರಿಂದ ಕಿರುಕುಳವಾಗಬಹುದು. ಇದನ್ನು ತಪ್ಪಿಸಿ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆಯನ್ನು ಒದಗಿಸಲು ಅನುಕೂಲವಾಗುವಂತೆ ಸಂಘ ಸ್ಥಾಪಿಸಬೇಕಿದೆ” ಎಂದರು.
” ಶಿಕ್ಷಣ, ಆರೋಗ್ಯ, ಬ್ಯಾಂಕ್ಗಳು, ಕೈಗಾರಿಕೆಗಳು ಹಾಗೂ ಚಾಮುಲ್ ಸೇರಿದಂತೆ ಇತರೆಡೆ ಹೆಚ್ಚಿನ ಹೊರಗುತ್ತಿಗೆ ನೌಕರರಿದ್ದಾರೆ. ನೊಂದಣಿ ಪ್ರಕ್ರಿಯೆಯಲ್ಲಿ ಯಾವುದೇ ಹೊರಗುತ್ತಿಗೆ ನೌಕರರು ವಂಚಿತರಾಗದಂತೆ ವ್ಯವಸ್ಥಿತ ನೊಂದಣಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ಸರ್ಕಾರಿ ಕೆಲಸ ಸಿಗದ ನಿರುದ್ಯೋಗಿಗಳಿಂದ ಹೊರಗುತ್ತಿಗೆ ಸೇವೆಗೂ ಸಾಕಷ್ಟು ಬೇಡಿಕೆ ಇದ್ದು, ಸರ್ಕಾರದ ಪ್ರತಿನಿಧಿಗಳಾಗಿ ಕೆಲಸ ಮಾಡುವ ನಾವೆಲ್ಲರೂ ಹೊರಗುತ್ತಿಗೆ ನೌಕರರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನೆರವಾಗಬೇಕಿದೆ ” ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಲಿದ್ದು, ಸಂಘಕ್ಕೆ ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ನಿರ್ದೇಶಕ ಮಂಡಳಿಯ ಅಗತ್ಯವಿದೆ. ಹೆಚ್ಚಿನ ಹೊರಗುತ್ತಿಗೆ ನೌಕರರಿರುವ ಇಲಾಖೆಗಳ ಸಿಬ್ಬಂದಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗುವುದು. ಹೊರಗುತ್ತಿಗೆ ನೌಕರರ ಒಟ್ಟಾರೆ ನೊಂದಣಿ ಪ್ರಕ್ರಿಯೆ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿರುವುದರಿಂದ ಕ್ರಮಬದ್ಧ ನೊಂದಣಿಗೆ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ ಎಂ ಸವಿತ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಮಹೇಶ್, ಸಹಕಾರ ಸಂಘಗಳ ಉಪನಿಬಂಧಕಿ ಜ್ಯೋತಿ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ ವಿ ಸುಧಾ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.