ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಒಗ್ಗಟ್ಟಿನಿಂದ ಪರಿಣಾಮಕಾರಿಯಾಗಿ ಚುನಾವಣೆಯನ್ನು ಎದುರಿಸೋಣ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಮಾತನಾಡಿ, “ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮಹಾನಗರ ಪಾಲಿಕೆಯ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಬೇಕು. ನಿಮ್ಮ ಗೆಲುವಿಗೆ ಪಕ್ಷ ಹಾಗೂ ನಾನು ವೈಯಕ್ತಿಕವಾಗಿ ಜತೆಯಲ್ಲಿ ಇರುತ್ತೇನೆ. ಪಕ್ಷದ ಗ್ಯಾರಂಟಿ ಕಾರ್ಯಕ್ರಮದ ಜತೆಗೆ ಮಹಾನಗರದ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ಮನೆಮನೆಗೆ ತಲುಪುವಂತೆ ಕಾರ್ಯಕರ್ತರು ಶ್ರಮಿಸಬೇಕು” ಎಂದು ಕಾರ್ಯಕರ್ತರಲ್ಲಿ ವಿನಂತಿಸಿದರು.
“ಕಾರ್ಯಕರ್ತರೇ ನಮ್ಮ ಪಕ್ಷದ ಜೀವಾಳ. ನಮ್ಮ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಂತೆಯೇ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಒಗ್ಗಟ್ಟಾಗಿ ತಮ್ಮ ಬೂತ್ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷವಾಗಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾ.ಪಂ, ತಾ.ಪಂ, ಜಿ.ಪಂ, ಪ.ಪಂ, ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳಿಗೆ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನು ಬೆಂಬಲಿಸಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು” ಎಂದರು.
“ಪ್ರತಿಯೊಬ್ಬ ಕಾರ್ಯಕರ್ತರೂ ಕೂಡ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿರಬೇಕು. ಪಕ್ಷದ ಚೌಕಟ್ಟಿನಲ್ಲಿ ಒಗ್ಗಟ್ಟಾಗಿ ಪಕ್ಷವನ್ನು ಇನ್ನಷ್ಟು ಸಂಘಟಿಸಿ ಬಲಿಷ್ಟಪಡಿಸಬೇಕು. ಇವತ್ತು ರಾಜ್ಯದಲ್ಲಿ ಅಧಿಕಾರಿಕ್ಕೆ ಬರಲು ಕಾರ್ಯಕರ್ತರ ಶ್ರಮ ಅನನ್ಯ. ನಿಮ್ಮ ಶ್ರಮ ವ್ಯರ್ಥವಾಗಲು ಬಿಡುವುದಿಲ್ಲ. ಮುಂದಿನ ಚುನಾವಣೆಗಳು, ಕಾರ್ಯಕರ್ತರ ಚುನಾವಣೆ ನಮ್ಮೆಲ್ಲರ ಹೊಣೆ ಸಾಕಷ್ಟಿದ್ದು ನಿಮ್ಮೆಲ್ಲರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ” ಎಂದು ನುಡಿದರು.
ಈ ಸುದ್ದಿ ಓದಿದ್ದೀರಾ? 10.43 ಕೋಟಿ ಮನರೇಗಾ ದಿನಗೂಲಿಗಳ ನೋಂದಣಿ ರದ್ದು; ಬಡವರ ಬದುಕು ಕಸಿದ ಮೋದಿ ಸರ್ಕಾರ
ಈ ಸಂದರ್ಭದಲ್ಲಿ ಚುನಾವಣೆಗೆ ಬೇಕಾದ ಪೂರ್ವ ತಯಾರಿಗಳ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರ ಮಾರ್ಗದರ್ಶನ ಹಾಗೂ ಸಲಹೆಗಳನ್ನು ಪಡೆಯಲಾಯಿತು.
ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಎಚ್ ಎಂ ಚಂದ್ರಶೇಖರಪ್ಪ, ಇಸ್ಮಾಯಿಲ್ ಖಾನ್, ಎಚ್ ಎಸ್ ಸುಂದರೇಶ್, ಎಂ ಶ್ರೀಕಾಂತ್, ಹೆಚ್ ಸಿ ಯೋಗೇಶ್, ಎನ್ ರಮೇಶ್, ಎನ್ ರವಿಕುಮಾರ್, ಎಸ್ ಕೆ ಮರಿಯಪ್ಪ, ಚಂದ್ರ ಭೂಪಾಲ್, ಕಲೀಮ್ ಪಾಷಾ, ಶಿವಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು, ಜನಪ್ರತಿನಿಧಿಗಳು, ಮಹಿಳಾ ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಇದ್ದರು.