ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳನ್ನು ರಾಜ್ಯಪಾಲರು ಮರಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ) ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರತ್ಯೇಕವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಮನವಿ ಮಾಡಿದ್ದರು.
ಸಾವಿರಾರು ಪುಟಗಳ ಆರೋಪಪಟ್ಟಿಯನ್ನು ಕನ್ನಡದಿಂದ ಇಂಗ್ಲಿಷ್ಗೆ ಅನುವಾದಿಸಿ ರಾಜ್ಯಪಾಲರಿಗೆ ತನಿಖಾಧಿಕಾರಿಗಳು ಸಲ್ಲಿಸಿದ್ದರು. ಆದರೆ, ಕೆಲ ತಾಂತ್ರಿಕ ಕಾರಣ ಮುಂದಿಟ್ಟು ಅವುಗಳಿಗೆ ಸ್ಪಷ್ಟನೆ ಕೋರಿ ಲೋಕಾಯುಕ್ತ ಪೊಲೀಸರು ಹಾಗೂ ಎಸ್ಐಟಿ ಅಧಿಕಾರಿಗಳಿಗೆ ರಾಜ್ಯಪಾಲರು ಆರೋಪ ಪಟ್ಟಿ ಮರಳಿಸಿದ್ದಾರೆ. ಈ ಎರಡು ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಕೆಲ ಸ್ಪಷ್ಟನೆಯನ್ನು ರಾಜ್ಯಪಾಲರು ಕೋರಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭಾ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಎಂಟು ವಿಧೇಯಕಗಳಿಗೆ ಅನುಮೋದನೆ ನೀಡದೆ ರಾಜ್ಯಪಾಲರು ಸರ್ಕಾರಕ್ಕೆ ಮರಳಿಸಿದ್ದರು. ಈ ಬೆನ್ನಲ್ಲೇ ವಿಪಕ್ಷಗಳ ನಾಯಕರ ಪ್ರಾಸಿಕ್ಯೂಷನ್ಗೆ ಒಪ್ಪಿಗೆ ಸೂಚಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.
ಏನಿದು ಕುಮಾರಸ್ವಾಮಿ ಪ್ರಕರಣ
2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ 550 ಎಕರೆ ಭೂಮಿಯನ್ನು ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ಮಂಜೂರಾತಿ ನೀಡಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಕೆಗೆ ಎಸ್ಐಟಿ ಪ್ರಾಸಿಕ್ಯೂಷನ್ ಕೋರಿಕೆ ಸಲ್ಲಿಸಿತ್ತು. ಆದರೆ ಈ ಪ್ರಕರಣ ಸಂಬಂಧ ಕೆಲ ಸುಪ್ರೀಂಕೋರ್ಟ್ ನೀಡಿರುವ ಆದೇಶಗಳ ಉಲ್ಲಂಘನೆಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ರಾಜ್ಯಪಾಲರು, ಈ ತಾಂತ್ರಿಕ ಗೊಂದಲಗಳ ಬಗ್ಗೆ ಸ್ಪಷ್ಟನೆ ಕೋರಿದ್ದರು.
ಕಳೆದ ವರ್ಷ ಕುಮಾರಸ್ವಾಮಿ ವಿರುದ್ಧ ಅಕ್ರಮ ಗಣಿಗಾರಿಕೆ ಮಂಜೂರಾತಿ ಪ್ರಕರಣದಲ್ಲಿ ಲೋಕಾಯುಕ್ತದ ವಿಶೇಷ ತನಿಖಾ ದಳ (ಎಸ್ಐಟಿ) ಹಾಗೂ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ಗೆ ಅನುಮತಿಗೆ ಮನವಿ ಮಾಡಿದ್ದರು. ಆಗ ಕನ್ನಡದ ಬದಲು ಆಂಗ್ಲ ಭಾಷೆಯಲ್ಲಿ ಅನುವಾದಿತ ವರದಿ ಸಲ್ಲಿಸುವಂತೆ ಸೂಚಿಸಿ ಪ್ರಾಸಿಕ್ಯೂಷನ್ ಕೋರಿಕೆಯನ್ನು ತನಿಖಾಧಿಕಾರಿಗಳಿಗೆ ರಾಜ್ಯಪಾಲರು ಮರಳಿಸಿದ್ದರು. ಕೊನೆಗೆ 5 ಸಾವಿರ ಪುಟಗಳ ಭಾಷಾಂತರ ವರದಿ ಸಮೇತ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ಗೆ ತನಿಖಾಧಿಕಾರಿಗಳು ಕೋರಿಕೆ ಸಲ್ಲಿಸಿದ್ದರು. ಮತ್ತೆ 2ನೇ ಬಾರಿಗೆ ತಾಂತ್ರಿಕ ಕಾರಣ ಹಿನ್ನೆಲೆಯಲ್ಲಿ ಕಡತಗಳು ರಾಜಭವನದಿಂದ ವಾಪಸ್ ಬಂದಿವೆ.
ಏನಿದು ರೆಡ್ಡಿ ಪ್ರಕರಣ
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಜನಾರ್ದನ ರೆಡ್ಡಿ ಅವರನ್ನು ದೋಷಮುಕ್ತಗೊಳಿಸಿ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಈ ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯವು, ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣದ ಮರು ತನಿಖೆಗೆ ಮತ್ತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.
ಹೀಗಾಗಿ ಮೊದಲು ಸಲ್ಲಿಸಿದ್ದ ಬಿ ರಿಪೋರ್ಟ್ ವರದಿಯನ್ನು ಇಂಗ್ಲಿಷ್ಗೆ ಭಾಷಾಂತರಿಸಿ ಸಲ್ಲಿಸುವಂತೆ ಸೂಚಿಸಿ ಪ್ರಾಸಿಕ್ಯೂಷನ್ ಮನವಿಯನ್ನು ರಾಜ್ಯಪಾಲರು ಮರಳಿಸಿದ್ದಾರೆ ಎಂದು ತಿಳಿದುಬಂದಿದೆ.