ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಡಿಎಚ್ಒ ಡಾ.ಯಲ್ಲಾ ರಮೇಶ್ ಬಾಬು ಸಲಹೆ ಮತ್ತು ಸೂಚನೆ ನೀಡಿದರು.
ಕುರುಗೋಡು ತಾಲೂಕಿನ ಕೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತನಾಡಿದ ಅವರು, ಮಧ್ಯಾಹ್ನ 12 ರಿಂದ 3 ಗಂಟೆ ಅವಧಿಯಲ್ಲಿ ಬಿಸಿಲಿನ ತೀವ್ರತೆಯು ಹೆಚ್ಚಾಗಿರುತ್ತದೆ. ಗರ್ಭಿಣಿಯರು ಸಾಧ್ಯವಾದಷ್ಟೂ ಮನೆಯಲ್ಲಿಯೇ ಇರುವ ಮೂಲಕ ಆರೋಗ್ಯದ ಕಾಳಜಿಗೆ ಕುಟುಂಬದ ಸದಸ್ಯರು ಸಹ ಮುತುವರ್ಜಿ ವಹಿಸಬೇಕು” ಎಂದು ತಿಳಿಸಿದರು.
“ಈಗಾಗಲೇ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬದ ಸದಸ್ಯರ ನಿರ್ಜಲೀಕರಣ ತಡೆಗಾಗಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್. ಕಾರ್ನರ್ ಮಾಡಲಾಗಿದ್ದು, ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ಓ.ಆರ್.ಎಸ್ ದ್ರಾವಣ ಸೇವಿಸುವ ಮೂಲಕ ದೇಹದಲ್ಲಿ ನಿರ್ಜಲೀಕರಣದಿಂದಾಗುವ ಅಪಾಯಗಳನ್ನು ತಪ್ಪಿಸಬಹುದಾಗಿದೆ” ಎಂದು ತಿಳಿಸಿದರು.
“ಈಗಾಗಲೇ ಬಿಸಿಲಿನ ಶಾಖಾಘಾತದಿಂದ ಸಂಭವಿಸಬಹುದಾದ ತೊಂದರೆಯನ್ನು ತಪ್ಪಿಸಲು ಮತ್ತು ತಕ್ಷಣ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ 01 ಬೆಡ್ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 02 ಬೆಡ್ ಕಾಯ್ದಿರಿಸಲಾಗಿದೆ” ಎಂದು ಹೇಳಿದರು.
ಇದನ್ನೂ ಓದಿ:ಬಳ್ಳಾರಿ | ಜು.12ರಂದು ರಾಷ್ಟ್ರೀಯ ‘ಲೋಕ ಅದಾಲತ್’
ತಾರನಾಥ ಆರ್ಯುವೇದ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ್, ಆಯುಷ್ ಪ್ರಾಧ್ಯಾಪಕ ಡಾ.ರಾಜಶೇಖರ್ ಗಾಣಿಗೇರ್, ಡಾ.ಫಣೀಂದ್ರ, ಡಾ.ಕಲ್ಯಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕಚೇರಿ ಅಧೀಕ್ಷಕ ಬಸವರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿರೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶರಣಮ್ಮ, ಸಿದ್ದಮ್ಮ, ಫಾರ್ಮಸಿಸ್ಟ್ ಕ್ರಿಷ್ಣಮೂರ್ತಿ, ಆಶಾಕಾರ್ಯಕರ್ತೆ ರಾಧ ಸೇರಿದಂತೆ ತಾಯಂದಿರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.