ವಿಟ್ಲದ ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಮಹೇಶ್ ಭಟ್ನನ್ನು ಕೂಡಲೇ ಬಂಧಿಸಲು ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಈ ಪ್ರಕರಣವನ್ನು ಪೊಲೀಸರು ಮರೆಮಾಚಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ಯಾವುದೇ ಹೆಣ್ಣು ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಪ್ರತಿಭಟನಾ ಹೋರಾಟ ನಡೆಸಲಾಗುತ್ತಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಆರೋಪಿ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ಮಾಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಿಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ. ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಭೋಗದ ವಸ್ತುವಾಗಿದೆ. ಇದು ಅವರ ಮನುವಾದ ಸಂಸ್ಕ್ರತಿ. ಅದಕ್ಕೆ ಡಾ ಬಿ ಆರ್ ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು. ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ. ಧರ್ಮರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ ಎಂದು ಪ್ರಶ್ನಿಸಿದ ಅವರು, ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗೆಡವಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಕಚೇರಿ ಮುಂದೆ ಎಸ್ಪಿ ಚಲೋ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.
ಇದನ್ನೂ ಓದಿ: ಮಂಗಳೂರು | ನಿವೇಶನರಹಿತರ ಕುರಿತು ನಿರ್ಲಕ್ಷ್ಯ; ಶಾಸಕ ಕಾಮತ್ ರಾಜೀನಾಮೆಗೆ ಸುನಿಲ್ ಬಜಾಲ್ ಆಗ್ರಹ
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡ ಬಿ.ಎಂ ಭಟ್, ದಲಿತ ಮುಖಂಡರಾದ ಚಂದ್ರಶೇಖರ್ ಕಿನ್ಯಾ, ವಿಶ್ವನಾಥ ಮಂಜನಾಡಿ, ಪುಷ್ಪರಾಜ್ ಮಾಣಿಲ, ಸುರೇಶ್, ಚಂದಪ್ಪ, ರಾಧಕೃಷ್ಣ ಬೊಂಡಂತಿಲ, ಕಮಲಾಕ್ಷ ಬಜಾಲ್, ರಾಘವೇಂದ್ರ ಪಡ್ಪು, ಶಿನ ಕನ್ಯಾನ, ರಾಮಪ್ಪ ಮಂಜೇಶ್ವರ, ಗಂಗಾಧರ ಗೋಲಿಯಡ್ಕ, ವಿಜಯ ಮೂಡಬಿದರೆ, ಡಿವೈಎಫ್ಐ ಮುಖಂಡರಾದ ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ನವೀನ್ ಕೊಂಚಾಡಿ, ರಝಾಕ್ ಮುಡಿಪು, ಅಸುಂತ ಡಿಸೋಜ, ಪ್ರಮಿಳಾ ಶಕ್ತಿನಗರ, ಸುನಿತಾ ತಣ್ಣೀರುಬಾವಿ, ಜೆಸಿಂತಾ ಜೋಕಟ್ಟೆ, ಅಭಿಷೇಕ್ ಬೆಳ್ತಂಗಡಿ, ಯೋಗಿತಾ ಕಾರ್ಮಿಕ ಮುಖಂಡರಾದ ಸುಕುಮಾರ್ ತೊಕ್ಕೊಟ್ಟು, ರಮೇಶ್, ಯೋಗೀಶ್ ಜಪ್ಪಿನಮೊಗರು, ಸಂತ್ರಸ್ತ ಕುಟುಂಬದ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.