ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ. ಒಳ ಮೀಸಲಾತಿ ವಿಚಾರದಲ್ಲಿಯೂ ಯಾವುದೇ ಅನುಮಾನ ಬೇಡ. ಒಳ ಮೀಸಲಾತಿಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಒಳ ಮೀಸಲಾತಿ ಬೇಡ ಅಂದರೂ ನಾವು ಜಾರಿಗೆ ತರುತ್ತೇವೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.
“ನರೇಂದ್ರ ಮೋದಿಯವರು EWS ಹೆಸರಲ್ಲಿ ಬ್ರಾಹ್ಮಣ ಸಮುದಾಯಕ್ಕೆ 10% ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ. ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ” ಎಂದು ಪ್ರಶ್ನಿಸಿದರು.
“ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ, ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ” ಎಂದರು.
ಬಾಬು ಜಗಜೀವನ್ ರಾಮ್ ಅವರ ಕುರಿತು ಮಾತನಾಡಿದ ಸಿದ್ದರಾಮಯ್ಯ, “ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂಬ ವಿಚಾರದಲ್ಲಿ ಸ್ಪಷ್ಟವಾದ ನಿಲುವು ಹೊಂದಿದ್ದರು” ಎಂದು ವಿವರಿಸಿದರು.
“ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು. ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದ್ದೇವೆ” ಎಂದು ವಿವರಿಸಿದರು.
“ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು. ನಮಗೆ ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ಸಿಗುವುದಿಲ್ಲ. ಹೀಗಾಗಿ, ಅವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು” ಎಂದರು.