ಸರ್ಕಾರಿ ಶಾಲೆಗಳು ಸಮಸ್ಯೆಗಳ ಆಗರವಾಗಿವೆ. ಶಿಕ್ಷಕರು ಬೋಧನೆಗಿಂತ ರಾಜಕೀಯ ಹೆಚ್ಚಾಗಿ ಮಾಡುತ್ತಿದ್ದಾರೆ. ಹೀಗಾದರೆ ಶಿಕ್ಷಣದ ಪರಿಸ್ಥಿತಿ ಏನಾಗಬಹುದು ಎಂದು ಶಾಸಕ ಪ್ರಭು ಚವ್ಹಾಣ ಕಳವಳ ವ್ಯಕ್ತಪಡಿಸಿದರು.
ಔರಾದ್ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಶಿಕ್ಷಕರಿರುವ ಕಡೆ ಮಕ್ಕಳಿಲ್ಲ, ಮಕ್ಕಳಿರುವ ಕಡೆ ಶಿಕ್ಷಕರಿಲ್ಲ. ಬಹಳಷ್ಟು ತಾಂಡಾಗಳಿಗೆ ಶಿಕ್ಷಕರು ಹೋಗುವುದಿಲ್ಲ. ಇಂತಹ ಅವ್ಯವಸ್ಥೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಕ್ಷೇತ್ರದೆಲ್ಲೆಡೆ ಗ್ರಾಮ ಸಂಚಾರ ನಡೆಸಿ ಪ್ರತಿ ಶಾಲೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಕಣ್ಣಾರೆ ವೀಕ್ಷಿಸಿದ್ದೇನೆ.
ಅಧಿಕಾರಿಗಳು ಇಲಾಖೆಯನ್ನು ಸುಧಾರಿಸಲು ಪ್ರಥಮ ಆದ್ಯತೆ ನೀಡಬೇಕು. ಶಿಕ್ಷಕರ ತಾರತಮ್ಯ ಸರಿಪಡಿಸಿ ಫಲಿತಾಂಶ ಸುಧಾರಣೆಗೆ ಒತ್ತು ಕೊಡಬೇಕು. ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಮಕ್ಕಳ ದಾಖಲಾತಿ ಹೆಚ್ಚಿಸುವಂತೆ ಮಾಡಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
‘ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಬೇಕು ಹಲವಾರು ಸಲ ಹೇಳಿದ್ದೇನೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ನಾನು ಶಿಕ್ಷಣದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದು, ಶಾಲಾ-ಕಾಲೇಜುಗಳ ನಿರ್ಮಾಣ, ಮೂಲಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಇಲಾಖೆಯ ಎಲ್ಲ ಅಗತ್ಯತೆಗಳನ್ನು ಪೂರೈಸುತ್ತಿದ್ದೇನೆ. ಅದಕ್ಕೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು’ ಎಂದು ಹೇಳಿದರು.
ಕೃಷಿ ಇಲಾಖೆಯಿಂದ ರೈತರಿಗೆ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಕಚೇರಿಯಲ್ಲಿನ ಹೊರಗುತ್ತಿಗೆ ಸಿಬ್ಬಂದಿಯಿಂದಲೇ ಅವ್ಯವಹಾರಗಳು ನಡೆಯುತ್ತಿವೆ ಮತ್ತು ತಮ್ಮವರಿಗೆ ಮಾತ್ರ ಸೌಲಭ್ಯಗಳನ್ನು ಸಿಗುವಂತೆ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಇಂಥ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಬೇಕು.

ಬೆಳೆ ವಿಮೆ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಹಂಗರಗಾ, ಎಕಂಬಾ, ದಬಕಾ, ಕಮಲನಗರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ವಿಮೆ ಸೌಲಭ್ಯ ಸಿಕ್ಕಿಲ್ಲ. ಹೆಚ್ಚು ಹಾನಿಯಾದವರನ್ನು ಬಿಟ್ಟು ಕಡಿಮೆ ಹಾನಿಯಾದವರಿಗೆ ಪರಿಹಾರ ನೀಡಲಾಗಿದೆ. ಕೆಲವು ಕಡೆ ಕೃಷಿ ಭೂಮಿ ಇಲ್ಲದವರಿಗೂ ವಿಮೆ ಸಿಕ್ಕಿರುವ ಬಗ್ಗೆ ಜನತೆ ಹೇಳುತ್ತಿದ್ದಾರೆ. ವಿಮೆ ಕಂಪನಿಯಿಂದ ಏಕೆ ಈ ರೀತಿಯ ಲೋಪಗಳಾಗುತ್ತಿವೆ. ಇಂತಹ ತಾರತಮ್ಯಗಳು ಆಗದಂತೆ ನೋಡಿಕೊಳ್ಳಬೇಕು. ಕ್ಷೇತ್ರದ ಯಾವುದೇ ರೈತರಿಗೂ ಅನ್ಯಾಯವಾದರೆ ನಾನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತಾಪ ಹೆಚ್ಚುತ್ತಿದೆ. ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಮಹಿಳೆಯರು ಕೊಡಗಳನ್ನು ಹಿಡಿದು ಬೀದಿ-ಬೀದಿ ಅಲೆಯುವ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಜಲ ಜೀವನ್ ಮಿಷನ್ ಪೂರ್ಣಗೊಂಡ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ವೈಫಲ್ಯದಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಬಾವಿ ನಿರ್ಮಿಸಬೇಕೆಂಬ ನಿಯಮವಿದೆ. ಆದರೆ ಅಧಿಕಾರಿಗಳು ನಿಯಮಗಳೆಲ್ಲವನ್ನು ಗಾಳಿಗೆ ತೂರಿ ಮನಬಂದಂತೆ ಕ್ರಿಯಾಯೋಜನೆ ರೂಪಿಸಿದ್ದಾರೆ. ಇಂತಹ ಸಮಸ್ಯೆಗಳಿಂದ ಯೋಜನೆ ವಿಫಲಗೊಂಡಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿರುವುದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ತಹಸೀಲ್ದಾರರು, ತಾಲ್ಲೂಕು ಪಂಚಾಯತ ಇಓ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಎಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಔರಾದ(ಬಿ) ಪಟ್ಟಣದ ಕೆಲವು ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು. ಎಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? Second PUC Result | ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 8ರಂದು ಪ್ರಕಟ
ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಔರಾದ(ಬಿ) ತಹಸೀಲ್ದಾರ ಮಹೇಶ ಪಾಟೀಲ, ಕಮಲನಗರ ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.