ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏಪ್ರಿಲ್ 14 ರಂದು ಸಾಯಂಕಾಲ 5 ಗಂಟೆಗೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಂಡರಗಿ ಹಾಗೂ ನಿಷ್ಕಲ ಮಂಟಲ ಬೈಲೂರಿನ ತೋಂಟದಾರ್ಯ ಮಠದ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹಾಗೂ ಆಣದೂರ ವೈಶಾಲಿ ನಗರ ಬುದ್ಧ ವಿಹಾರದ ಪೂಜ್ಯ ಭಂತೆ ಜ್ಞಾನಸಾಗರ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ನೆರೆವೇರಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ್, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಭಾಗವಹಿಸಲಿದ್ದಾರೆ
ಮದ್ಯ ಮಾರಾಟ ನಿಷೇಧ :
ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಶಾಂತಿಯುವಾಗಿ ಆಚರಿಸಲು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ21ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಏಪ್ರಿಲ್ 13ರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆಯವರೆಗೆ ಬೀದರ್ ನಗರ ಪ್ರದೇಶದಲ್ಲಿ ಮಾತ್ರ (ಕೆಎಸ್ಬಿಸಿಎಲ್ ಡಿಪೋ ಹೊರತುಪಡಿಸಿ) ಎಲ್ಲ ವಿಧದ ಮದ್ಯ ಮಾರಾಟ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದ ಶಿಲ್ಪಾ ಶರ್ಮಾ ಅವರು ಆದೇಶಿಸಿದ್ದಾರೆ.