- ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ
- ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಲು ಮನವಿ
ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಬಳಿಕ ಅವರು ಭರವಸೆ ನೀಡಿದರು.
“ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದರು.
ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ, ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದು ಧರ್ಮದ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ನಿಯೋಗ ಸಿಎಂಗೆ ಮನವರಿಕೆ ಮಾಡಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನತಂತ್ರವೆಂಬುದು ಭಾರತದ ವಂಶವಾಹಿಯಲ್ಲಿದೆಯೇ ಮೋದಿಯವರೇ, ಹೌದೇ?
ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಕ್, ರಹಮತ್ ತರೀಕೆರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.