ಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.
ನಿನ್ನೆ (ಏಪ್ರಿಲ್ 26) ಮೈಸೂರಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪಹಲ್ಗಾಮ್ ಅದೊಂದು ಯಾತ್ರಾರ್ಥಿಗಳ ಸ್ಥಳ. ಅಲ್ಲಿ ಭದ್ರತೆಯನ್ನು ಕೈಗೊಳ್ಳಬೇಕಿತ್ತು. ಈ ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಆಗಿದೆ. ಅದೊಂದು ಗುಪ್ತಚರ ಹಾಗೂ ಭದ್ರತಾ ವೈಫಲ್ಯ. ಕೇಂದ್ರ ಸರ್ಕಾರಕ್ಕೆ ಭದ್ರತಾ ಕ್ರಮ ತೆಗೆದುಕೊಂಡಿಲ್ಲ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ
ಇನ್ನು ಒದೇ ವೇಳೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯುದ್ಧದ ಅಗತ್ಯತೆ ಇಲ್ಲ. ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಅಷ್ಟೇ. ಭದ್ರತಾ ವ್ಯಸಸ್ಥೆ ಮಾಡಬೇಕು. ಯುದ್ಧದ ಪರ ನಾವು ಇಲ್ಲ. ಶಾಂತಿ ಇರಬೇಕು. ಜನರಿಗೆ ಭದ್ರತೆ ಇರಬೇಕು. ಕೇಂದ್ರ ಸರ್ಕಾರ ಭದ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಈ ಹೇಳಿಕೆಯನ್ನು ಪಾಕ್ನ ಜಿಯೋ ಟಿವಿ ಸೇರಿದಂತೆ ಹಲವು ಮಾಧ್ಯಮಗಳು ಪ್ರಸಾರ ಮಾಡಿವೆ.
ಸಿದ್ದರಾಮಯ್ಯ ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾಗುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಇತ್ತ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಪಾಕ್ ಟಿವಿ ಪ್ರಸಾರ ಮಾಡಿರುವ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.