ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಶಾಹೀನ್ ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇತನ’ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ ಎಂದು
ಈ ವರ್ಷ ಸಮೂಹದ ಕಲ್ಯಾಣ ಕರ್ನಾಟಕ ಭಾಗದ ಒಂಬತ್ತು ಪದವಿಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಒಟ್ಟು 250 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್
ಖದೀರ್ ತಿಳಿಸಿದ್ದಾರೆ.
ಬೀದರ್ ಮುಖ್ಯ ಶಾಖೆಯಲ್ಲಿ 75, ಕಲಬುರಗಿ ಶಾಖೆಯಲ್ಲಿ 35, ರಾಯಚೂರು, ಬಳ್ಳಾರಿ, ಯಾದಗಿರಿ, ಔರಾದ್, ಬಸವಕಲ್ಯಾಣ, ಚಿಟಗುಪ್ಪ ಹಾಗೂ ಹುಮನಾಬಾದ್ ಶಾಖೆಗಳಲ್ಲಿ ತಲಾ 20 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು ಎಂದು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಗಳಿಸಿದ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಸಮೂಹದ ಆಯಾ ಶಾಖೆಗಳಲ್ಲಿ ಅಥವಾ ಆನ್ಲೈನ್ನಲ್ಲಿ (www.shaheengroup.org) ಮೇ 15 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ರವಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 18 ರಂದು ಆಯಾ ಶಾಖೆಗಳಲ್ಲಿ ಸಂದರ್ಶನ ನಡೆಯಲಿದೆ. ಅರ್ಹತೆ ಆಧಾರದಲ್ಲಿ ಆಯ್ಕೆ ಜರುಗಲಿದೆ. ಗ್ರಾಮೀಣ ಭಾಗದ, ಅಂಗವಿಕಲ ಹಾಗೂ ಅನಾಥ ಮಕ್ಕಳಿಗೆ ವಿಶೇಷ ಆದ್ಯತೆ ಕೊಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರೂಪದಲ್ಲಿ ಕಾಲೇಜು ಶುಲ್ಕದಲ್ಲಿ ಶೇ 75 ರಷ್ಟು ರಿಯಾಯಿತಿ ಸಿಗಲಿದೆ ಎಂದು ಹೇಳಿದ್ದಾರೆ.
ʼಶಾಹೀನ್ ಕಾಲೇಜಿನ 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ತೇರ್ಗಡೆ ಹಾಗೂ ಸಾಧನೆ ಪ್ರಮಾಣ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗಿಂತ ಶೇ 13 ರಷ್ಟು ಹೆಚ್ಚಿದೆ. ಉರ್ದು ಮಾಧ್ಯಮ ವಿದ್ಯಾರ್ಥಿಗಳು ಮೂರನೇ ಸ್ಥಾನದಲ್ಲಿದ್ದಾರೆ. ಇತರ ವಿದ್ಯಾರ್ಥಿಗಳಿಗಿಂತ ಹಾಸ್ಟೆಲ್ ವಿದ್ಯಾರ್ಥಿಗಳ ಸಾಧನೆ ಹೆಚ್ಚಿದೆ. ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸಲು ವಿದ್ಯಾರ್ಥಿ ವೇತನ ಯೋಜನೆ ರೂಪಿಸಲಾಗಿದೆʼ ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಶೈಕ್ಷಣಿಕ ಜಾಗೃತಿ ಮೂಡಬೇಕಿದೆ. ಸಾವಿರಾರು ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್ ಕನಸು ನನಸಾಗಿಸಿದ ಹೆಮ್ಮೆ ಶಾಹೀನ್ಗೆ ಇದೆ. ಶಾಹೀನ್ನಲ್ಲಿ ಓದಿದ 100 ಕುಟುಂಬಗಳ ತಲಾ ಇಬ್ಬರು-ಮೂವರು ಮಕ್ಕಳು ವೈದ್ಯರಾದ ಉದಾಹರಣೆಗಳು ಇವೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಶಿಷ್ಯವೇತನದ ಲಾಭ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಪಿಯುಸಿ ಮರು ಮೌಲ್ಯಮಾಪನ : ಔರಾದ್ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಆರತಿ
ಶಿಷ್ಯವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964763018 (ಬೀದರ್ ಮುಖ್ಯ ಕಚೇರಿ), 7666048172 (ಕಲಬುರಗಿ ಶಾಖೆ), 9916149428 (ಔರಾದ್), 9845058018 (ಬಸವಕಲ್ಯಾಣ), 8971222784 (ಚಿಟಗುಪ್ಪ), 7026951056 (ಹುಮನಾಬಾದ್), 9880539999 (ರಾಯಚೂರು), 9986670286 (ಯಾದಗಿರಿ) ಅಥವಾ 8553165562 (ಬಳ್ಳಾರಿ ಶಾಖೆ)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.