ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠ ವಜಾಗೊಳಿಸಿದೆ.
ವಕೀಲ ಮತ್ತು ಬಿಜೆಪಿ ನಾಯಕ ಎಸ್ ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆರ್. ಮಸೂದಿ ಮತ್ತು ನ್ಯಾಯಮೂರ್ತಿ ರಾಜೀವ್ ಸಿಂಗ್ ಅವರನ್ನೊಳಗೊಂಡ ಪೀಠ, “ಈ ವಿಷಯವು ಎರಡು ದೇಶಗಳ ನಡುವಿನ ಸಂವಹನವಾಗಿದ್ದು, ಭಾರತ ಸರ್ಕಾರವು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ನಿರ್ದೇಶಿಸಿದೆ.
ಇಂತಹ ಸಂದರ್ಭಗಳಲ್ಲಿ ಅರ್ಜಿಯನ್ನು ಬಾಕಿ ಇಡಲು ಆಗುವುದಿಲ್ಲ. ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಅರ್ಜಿದಾರರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸ್ವಾತಂತ್ರ್ಯ ನೀಡಿದೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವವನ್ನು ನಿರ್ಧರಿಸುವ ಹೊಣೆಗಾರಿಕೆ ಭಾರತ ಸರ್ಕಾರದ ಮೇಲಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆಗೆ ಒಳಪಡುತ್ತದೆ ಎಂದು ಪೀಠ ಹೇಳಿದೆ.
ರಾಹುಲ್ ಗಾಂಧಿ ಅವರು ಬ್ರಿಟನ್ ಮತ್ತು ಭಾರತದ ಪ್ರಜೆಗಳಾಗಿದ್ದು, ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ವಿಘ್ನೇಶ್ ಶಿಶಿರ್ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.
ಸುಬ್ರಮಣಿಯಂ ಅವರಿಂದಲೂ ಅರ್ಜಿ
ರಾಹುಲ್ ಅವರ ಭಾರತೀಯ ಪೌರತ್ವ ಪ್ರಶ್ನಿಸಿರುವ ಇದೇ ರೀತಿಯ ಮನವಿಯನ್ನು ಬಿಜೆಪಿ ನಾಯಕ ಸುಬ್ರಮಣಿಯಂ ಸ್ವಾಮಿ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಅಲಾಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಇತ್ಯರ್ಥಗೊಂಡ ನಂತರವೇ ಪ್ರಕರಣ ಆಲಿಸುವುದಾಗಿ ದೆಹಲಿ ಹೈಕೋರ್ಟ್ ಸೂಚಿಸಿದೆ.
ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿಯನ್ನು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2024ರಲ್ಲಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಹಾಸ್ ಶೆಟ್ಟಿ ಸಾವಿನಲ್ಲಿ ಬಿಜೆಪಿ ಕೆಟ್ಟ ರಾಜಕೀಯ
ರಾಹುಲ್ ಗಾಂಧಿ ಅವರು ಬ್ರಿಟನ್ನಲ್ಲಿ 2003 ರಲ್ಲಿ ನೊಂದಾಯಿಸಿರುವ ಬ್ಯಾಕ್ಆಪ್ಸ್ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸ್ವಾಮಿ 2019 ರಲ್ಲಿ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಅಕ್ಟೋಬರ್ 10, 2005 ಮತ್ತು ಅಕ್ಟೋಬರ್ 31, 2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಫೆಬ್ರವರಿ 17, 2009 ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಇದು ಭಾರತದ ಸಂವಿಧಾನ ಮತ್ತು ಭಾರತೀಯ ಪೌರತ್ವ ಕಾಯಿದೆ, 1955ರ ಅನುಚ್ಛೇದ 9 ಅನ್ನು ಉಲ್ಲಂಘಿಸುತ್ತದೆ ಎನ್ನುವುದು ಸ್ವಾಮಿ ಅವರ ವಾದ.
ಸ್ವಾಮಿ ಅವರ ಪತ್ರದ ಹಿನ್ನೆಲೆಯಲ್ಲಿ ಗೃಹ ಇಲಾಖೆಯು ಏಪ್ರಿಲ್ 29, 2019 ರಂದು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ “ವಾಸ್ತವ ಸ್ಥಿತಿಯನ್ನು ತಿಳಿಸುವಂತೆ” ಕೇಳಿಕೊಂಡಿತ್ತು. ಸುಬ್ರಮಣಿಯನ್ ಸ್ವಾಮಿ ಅವರು ತಾವು ಗೃಹ ಇಲಾಖೆಗೆ ಪತ್ರ ಬರೆದು ಐದು ವರ್ಷಗಳಿಗಿಂತ ಹೆಚ್ಚು ಸಮಯವೇ ಸಂದಿದ್ದರೂ ಈ ಕುರಿತು ಯಾವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನುವ ಬಗ್ಗೆ ಗೃಹ ಇಲಾಖೆಯಿಂದ ಯಾವುದೇ ಸ್ಪಷ್ಟನೆ ದೊರೆತಿರಲಿಲ್ಲ.