- ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ
- 2019ರಲ್ಲಿ ಕೋಲಾರ ಚುನಾವಣಾ ಪ್ರಚಾರ ವೇಳೆ ಮೋದಿ ಉಪನಾಮ ಬಗ್ಗೆ ರಾಹುಲ್ ಹೇಳಿಕೆ
ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು ಎಂಬ ಹೇಳಿಕೆ ಸಂಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೇಲೆ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ (ಜುಲೈ 7) ತಿರಸ್ಕರಿಸಿದೆ.
ಈ ಮೂಲಕ ರಾಹುಲ್ ಅವರ ಲೋಕಸಭೆ ಸದಸ್ಯತ್ವದ ಅನರ್ಹತೆ ಮುಂದುವರಿಯುವಂತಾಗಿದೆ.
ರಾಹುಲ್ ಗಾಂಧಿ ಅವರಿಗೆ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಅವರು ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿ ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಅದೇಶ ನೀಡಲು ನಿರಾಕರಿಸಿದ್ದರು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಿದೆ. “ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ” ಎಂದು ಹೈಕೋರ್ಟ್ ಹೇಳಿದೆ.
ಈ ಹಿಂದೆ ಗುಜರಾತ್ ಹೈಕೋರ್ಟ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಅವರಿಗೆ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ. ಅಂತಿಮ ಆದೇಶ ನೀಡಲಾಗುವುದು ಎಂದು ಏಪ್ರಿಲ್ 20ರ ಆದೇಶದಲ್ಲಿ ಹೇಳಿತ್ತು.
ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.
ರಾಹುಲ್ ಅವರು 2019ರಲ್ಲಿ ಕೋಲಾರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆ ವೇಳೆ ‘ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು’ ಎಂದು ಹೇಳಿದ್ದರು.
ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದ ಅಣ್ಣಾಮಲೈ
ಪ್ರಕರಣ ಸಂಬಂಧ ಗುಜರಾತ್ ಸೂರತ್ನ ಸೆಷನ್ಸ್ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಯವರಿಗೆ ಮಾರ್ಚ್ 23 ರಂದು 2 ವರ್ಷಗಳ ಶಿಕ್ಷೆ ವಿಧಿಸಿತ್ತು.
ಬಳಿಕ ರಾಹುಲ್ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು