- ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ ರೂಪಾಯಿ
- ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ನಿಧಿಗೆ 34,294 ಕೋಟಿ ರೂ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ, 2023ರ ಫೆಬ್ರವರಿಯಲ್ಲಿ ಹಿಂದಿನ ಸರ್ಕಾರ ಮಂಡಿಸಿದ್ದ ಆಯವ್ಯಯದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಗೆ ಹಂಚಿಕೆ ಮಾಡಿದ್ದ 30,215 ಕೋಟಿ ರೂ. ಅನುದಾನವನ್ನು, ನಾನು ಈ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ 24,333 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 9,960 ಕೋಟಿ ರೂ. ಸೇರಿದಂತೆ ಒಟ್ಟಾರೆ 34,294 ಕೋಟಿ ರೂ.ಗಳಿಗೆ ಹೆಚ್ಚಿಸಿ, 4,079 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಎಸ್ಸಿಎಸ್ಪಿ, ಟಿಎಸ್ಪಿ ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳ ಒಳಿತಿಗೆ ಬಳಕೆಯಾಗಬೇಕೆನ್ನುವುದು ನಮ್ಮ ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ದಲಿತ ಸಂಘಟನೆಗಳು ಮತ್ತು ಚಿಂತಕರ ಬಹುದಿನಗಳ ಒತ್ತಾಯದನ್ವಯ ಕಾಯ್ದೆಯ ಸೆಕ್ಷನ್ 7(ಡಿ) ಅನ್ನು ಕೈಬಿಡಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೇನು?
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಹತ್ತು ಕ್ರೈಸ್ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ತಲಾ ಎರಡು ಕೋಟಿ ರೂ.ಗಳಂತೆ ಒಟ್ಟು 20 ಕೋಟಿ ರೂ.
- ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಕೈಗೊಳ್ಳುವ ಸಲುವಾಗಿ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ನೀಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 36 ಕೋಟಿ ರೂ. ಅನುದಾನ.
- ಐಎಸ್ಇಸಿ ಸಂಸ್ಥೆಯಲ್ಲಿ ಪಿಎಸ್ಡಿ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು ಎರಡು ಕೋಟಿ ರೂ. ಗ್ರಾಪ್ಸ್ ಫಂಡ್.
- ʻಸ್ವಾವಲಂಬಿ ಸಾರಥಿʼ ಯೋಜನೆಯಡಿ ಎಸ್ಸಿ, ಎಸ್ಟಿ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ. 75 ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ.
- ರಾಜ್ಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯುವ ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಎರಡು ಕೋಟಿ ರೂ.ವರೆಗೆ ಸರ್ಕಾರದಿಂದ ಸಮಾನಾಂತರ ಖಾತ್ರಿ ನೀಡುವ ಯೋಜನೆ ಜಾರಿಯಲ್ಲಿದ್ದು, ಸಮಾನಾಂತರ ಖಾತ್ರಿಯನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಪಡೆಯುವ ಸಾಲಕ್ಕೂ ವಿಸ್ತರಿಸಲಾಗುವುದು.
- ಎಸ್ಸಿಎಸ್ಟಿ ಯುವಜನರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಡಿ (ಇಡಿಪಿ) ತರಬೇತಿ ಕಾರ್ಯಕ್ರಮ ಆಯೋಜನೆ.
- ಎಸ್ಸಿ, ಎಸ್ಟಿ ಒಂದು ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ವಾಣಿಜ್ಯ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ ಗರಿಷ್ಠ ಶೇ. 20ರಷ್ಟು ಅಥವಾ ಒಂದು ಲಕ್ಷ ರೂ.ಗಳು ಮೀರದಂತೆ ಸಾಲ ಸಹಾಯಧನ.
- ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿಗಳ ಕುಟುಂಬಗಳ 100 ಯುವಜನರಿಗೆ ಚರ್ಮ ಉದ್ಯಮದಲ್ಲಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳಿಗೆ ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಾದ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಕಳುಹಿಸಲಾಗುವುದು.
- ಜಿಲ್ಲಾ ಮಟ್ಟದಲ್ಲಿ ಎಸ್ಸಿ, ಎಸ್ಟಿ ಹಿರಿಯ ನಾಗರಿಕರ ಆರೈಕೆ ಮತ್ತು ನೆರವಿಗಾಗಿ ವೃದ್ಧಾಶ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಪರಿಹಾರ ಸಮಿತಿ (ಸಿಆರ್ಸಿ) ಮತ್ತು ಎನ್ಜಿಒಗಳ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
- ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವನ್ನು ದೌರ್ಜನ್ಯ ತಡೆ ಅಧಿನಿಯಮದಡಿ ರಕ್ಷಣಾ ಕೋಶವನ್ನಾಗಿ ಘೋಷಿಸಲಾಗಿದೆ.
ಈ ಕೋಶವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಲಾಗುವುದು. - ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡಂತೆ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ
50 ಕೋಟಿ ರೂ.ಗಳನ್ನು ಒದಗಿಸಲಾಗುವುದು. - ರಾಜ್ಯದ ಎಂಟು ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದ್ದು, ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
- ಅರಣ್ಯ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು TRIFED ಸಮನ್ವಯದಲ್ಲಿ ಸ್ಥಾಪಿಸಲಾಗುವುದು.