ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಜೆಟ್ ಭಾಷಣದಲ್ಲಿ ರೇಷ್ಮೆ ವಿಚಾರವಾಗಿ ವಿಷಯ ಪ್ರಸ್ತಾಪಿಸಿ, “ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದೆ” ಎಂದರು.
“ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ” ಎಂದು ಹೇಳಿದರು.
“ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು” ಎಂದರು.