ಉಡುಪಿ | ಮುಂಬರುವ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪಗಳಿಗೆ ತಕ್ಷಣವೇ ಸ್ಪಂದಿಸಲು ಸನ್ನದ್ಧರಾಗಿರಿ – ಜಿಲ್ಲಾಧಿಕಾರಿ

Date:

Advertisements

ಉಡುಪಿ ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮುಂಗಾರು ಮಳೆಗಾಲದಲ್ಲಿ ಮಳೆಯ ನೀರು ಹೆಚ್ಚಾಗಿ ಕೃತಕ ನೆರೆಗಳು ಉಂಟಾಗಿ ಮನೆಗಳಿಗೆ ಹಾಗೂ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಹಾನಿ ಉಂಟಾಗುತ್ತದೆ. ಕಳೆದ ಮಳೆಗಾಲದಲ್ಲಿ ಇಂತಹ ಪ್ರಕರಣಗಳು ಉಂಟಾಗಿ ಸಾರ್ವಜನಿಕರು ತೊಂದರೆಯನ್ನು ಅನುಭವಿಸಿದ್ದಾರೆ. ಈ ಬಾರಿ ಹೀಗಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜ ಕಾಲುವೆ, ತೋಡುಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಲು ಈಗಾಗಲೇ ಕಳೆದ ಎರಡು ಮೂರು ತಿಂಗಳಿನ ಹಿಂದೆ ಸೂಚಿಸಲಾಗಿದೆ. ಆದರೂ ಸಹ ಇವುಗಳ ನಿರ್ವಹಣೆ ಸಮರ್ಪಕವಾಗಿಲ್ಲ. ಕೂಡಲೇ ತಹಶೀಲ್ದಾರರುಗಳು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ನದಿಯಲ್ಲಿ ಹೂಳು ತುಂಬಿದ ಕಾರಣ ಕೆಲವು ಭಾಗಗಳಲ್ಲಿ ನೀರು ಕೃಷಿ ಭೂಮಿಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡುತ್ತಿದೆ. ಈ ಬಗ್ಗೆ ರೈತರು ಇದರ ತೆರವಿಗೆ ಮನವಿ ಮಾಡಿದ್ದಾರೆ. ತೆರವು ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

ರಾಷ್ಟ್ರೀಯ ಹೆದ್ದಾರಿ ರಸ್ತೆಯ ಎರಡೂ ಬದಿಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಯಾವ ಯಾವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಬಗ್ಗೆ ತಿಳಿಸಿದರೂ ಸಹ ಹೆದ್ದಾರಿ ಇಲಾಖೆಗಳ ಅಭಿಯಂತರರುಗಳು ಸ್ಪಂದಿಸದೇ ಇರುವುದು ಕಂಡುಬರುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಅಂತಹವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಎಫ್.ಐ.ಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಳೆ ನೀರು ಕೊಯ್ಲು ಅನ್ನು ಸರ್ಕಾರಿ ಹಾಗೂ ಖಾಸಗಿ ಬೋರ್‌ವೆಲ್ ಹಾಗೂ ತೆರೆದ ಬಾವಿಗಳಿಗೆ ಅಳವಡಿಸುವಂತೆ ಕಳೆದ ಸಾಲಿನಲ್ಲಿ ಸೂಚನೆ ನೀಡಲಾಗಿತ್ತು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 1616 ತೆರೆದ ಬಾವಿಗಳು ಹಾಗೂ 1554 ಕೊಳವೆ ಬಾವಿಗಳು ಇವೆ. ಆದರೆ ಕ್ರಮವಾಗಿ 44 ಹಾಗೂ 93 ಗಳಿಗೆ ಮಾತ್ರ ಮಳೆ ನೀರು ಕೊಯ್ಲು ಅಳವಡಿಸಲಾಗಿದೆ. ಇವುಗಳನ್ನು ಆದ್ಯತೆಯ ಮೇಲೆ ಕೂಡಲೇ ಅಳವಡಿಸಬೇಕೆಂದು ಸೂಚನೆ ನೀಡಿದ ಅವರು, ಖಾಸಗಿ ಯವರೂ ಸಹ ಮಳೆ ನೀರು ಕೊಯ್ಲನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಅಂತರ್ಜಲ ಹೆಚ್ಚುವುದರ ಜೊತೆಗೆ ಬೇಸಿಗೆಯಲ್ಲಿ ನೀರಿನ ಅಭಾವ ತಪ್ಪಿಸಲು ಸಾಧ್ಯ ಎಂದರು.

ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಂಡುಬಂದಿಲ್ಲ. ಕುಡಿಯುವ ನೀರಿನ ಸಮಸ್ಯೆ ಕಂಡುಬAದಲ್ಲಿ ಕೂಡಲೇ ಸ್ಪಂದಿಸುವ ಕಾರ್ಯಗಳು ಆಗಬೇಕು ಎಂದ ಅವರು, ನೀರಿನ ಗುಣಮಟ್ಟ ಪರೀಕ್ಷೆಗಳನ್ನು ಆಗಿಂದಾಗ್ಗೆ ಕೈಗೊಳ್ಳಬೇಕು ಸೂಚನೆ ನೀಡಿದರು.

ಅಪಾಯಕಾರಿಯಾದಂತಹ ಹಳೆಯ ಮರಗಳು, ಬೇರು ಸಡಿಲಗೊಂಡ ಮರಗಳನ್ನು ತೆರವು ಕಾರ್ಯಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಕಳೆದ ಸಾಲಿನಲ್ಲಿ ಮರಗಳ ಉರುಳುವಿಕೆಯಿಂದ ಎರಡು ಮಾನವ ಹಾನಿ ಪ್ರಕರಣಗಳು ಉಂಟಾಗಿವೆ. ಈ ಬಾರಿ ಹಾಗಾಗದಂತೆ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ತೆರವು ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.
ಮಳೆಯಿಂದ ಉಂಟಾದ ಕಟ್ಟಡದ ಹಾನಿ, ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದ ಅವರು, ಶಾಲಾ ಕಾಲೇಜುಗಳ ಕಟ್ಟಡಗಳನ್ನು ಪರೀಕ್ಷಿಸಿ, ಅವುಗಳು ಸರಿಯಿವೆ ಎಂಬ ದೃಢೀಕರಣಗಳನ್ನು ಅಭಿಯಂತರರಿAದ ಪಡೆಯಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರಬೇಕು. ಈ ಸಮಿತಿಗಳಲ್ಲಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ ಮಹಿಳೆಯರನ್ನೂ ಸಹ ಸಮಿತಿಯ ಸದಸ್ಯರನ್ನಾಗಿಸಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯ ವಿಪತ್ತು ನಿರ್ವಹಣಾ ಕಾರ್ಯವನ್ನು ಮಾಡುವ ಕುರಿತು ಯೋಜನೆಗಳನ್ನು ಸಹ ರೂಪಿಸಬೇಕು. ಯಾವುದೇ ವಿಪತ್ತುಗಳು ಆದಲ್ಲಿ ಗ್ರಾಮ ಲೆಕ್ಕಿಗರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಸ್ಪಂದಿಸಲು ಮುಂದಾಗಬೇಕು. ಮರಣ ಸಂಭವಿಸಿದ್ದಲ್ಲಿ 24 ಗಂಟೆಯ ಒಳಗಾಗಿ ಅವರುಗಳಿಗೆ ಪರಿಹಾರ ಒದಗಿಸಲು ಕಾರ್ಯಪ್ರವೃತ್ತರಾಗಿರಬೇಕು ಎಂದರು.

ಕದನ ಪರಿಸ್ಥಿತಿ ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಾಪಾಡಲು ಸೂಚಿಸಲಾಗಿದೆ. ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಕ್ರಮ ದಾಸ್ತಾನು ಹಾಗೂ ಕಳ್ಳ ಸಂತೆ ಮೇಲೆ ನಿಗಾ ವಹಿಸಲಾಗಿದೆ. ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಲು ಎಚ್ಚರಿಕೆ ವಹಿಸಲಾಗುವುದು ಎಂದ ಅವರು, ಸುರಕ್ಷತೆ ಕುರಿತಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಪಾಕ್ ವಿರುದ್ಧ ಯುದ್ಧ ಸನ್ನದ್ಧ ಸ್ಥಿತಿ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗ್ನಿ ಶಾಮಕ ದಳದ ಕೇಂದ್ರಗಳು, 24 ಗಂಟೆಗಳು ಸನ್ನದ್ಧ ಸ್ಥಿತಿಯಲ್ಲಿವೆ. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು 400 ಕ್ಕೂ ಹೆಚ್ಚು ಸ್ವಯಂ ಸೇವಕರುಗಳನ್ನು ಗುರುತಿಸಲಾಗಿದೆ. ಈಗಾಗಲೆ ಹದಿನೆಂಟು ವರ್ಷ ಮೇಲ್ಪಟ್ಟ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಸ್ವಯಂ ಸೇವಕರುಗಳಿಗೂ ತರಬೇತಿ ನೀಡಿ, ಅಗತ್ಯವಿದ್ದಲ್ಲಿ ತುರ್ತು ಸಂದರ್ಭಗಳಲ್ಲಿ ಅವರುಗಳನ್ನು ನಿಯೋಜಿಸಲಾಗುವುದು ಎಂದ ಅವರು, ಕರಾವಳಿ ಕಾವಲು ಪಡೆಯ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಬೆಡ್‌ಗಳು, ಔಷಧಿಗಳು, ಸಾಕಷ್ಟು ದಾಸ್ತಾನು ಇರುವಂತೆ ಹಾಗೂ ವೈದ್ಯರುಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಯಾವುದೇ ಅನಾಹುತಗಳು ಅಥವಾ ಮತ್ತಿತರ ತೊಂದರೆಗಳಾದ್ದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ನಂಬರ್ ಗೆ ಮಾಹಿತಿ ನೀಡಬೇಕು ಎಂದ ಅವರು, ಜಿಲ್ಲೆಯಲ್ಲಿ ಡ್ರೋನ್‌ಗಳ ಬಳಕೆ ಮಾಡುವಂತಿಲ್ಲ. ಜಿಲ್ಲಾಡಳಿತದಿಂದ ಹೊರತುಪಡಿಸಿ, ಮತ್ತಿತರ ಕಡೆಗಳಿಂದ ಬರುವ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಮತ್ತಿತರ ಕಡೆ ಹಂಚಿಕೊಳ್ಳುವಂತಿಲ್ಲ ಎಂದರು. ಸಭೆಯಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು, ಇ.ಓಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X