ಸರ್ಕಾರಿ ಕಟ್ಟಡಗಳನ್ನು ನೆಲಸಮ ಮಾಡಲು ಅವಕಾಶ ಮಾಡಿಕೊಟ್ಟಿರುವ ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ 11 ಮಂದಿ ಸದಸ್ಯರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಕುಂದೂರು ಪ್ರಸನ್ನ ಕುಮಾರ್ ನೇತೃತ್ವದಲ್ಲಿ ನಾಲ್ಕು ದಿನಗಳಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
“ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಇರುವ ನಾಡಕಚೇರಿ ಕಟ್ಟಡ ನೆಲಸಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಉಲ್ಲಂಘಿಸಲಾಗಿದೆ. ಸುಮಾರು 40 ಲಕ್ಷ ರೂ. ಮೌಲ್ಯದ ಮತ್ತು ಇನ್ನೂ 30 ವರ್ಷ ಬಾಳಿಕೆ ಬರುತ್ತಿದ್ದ ಎರಡು ಸರ್ಕಾರಿ ಕಟ್ಟಡಗಳನ್ನು ಸರ್ಕಾರದ ಇತರೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಕಟ್ಟಡಗಳನ್ನು ನೆಲಸಮ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.
“ಕಟ್ಟಡ ತೆರವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸುವಂತೆ ಆಗ್ರಹಿಸಿ ತಾಲೂಕು ಪಂಚಾಯಿತಿ ಇಒ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಆರ್ಡಿಪಿಆರ್ ಪ್ರಿನ್ಸಿಪಾಲ್ ಸೆಕ್ರೆಟರಿಗಳಿಗೆ ಮೂರು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ಆಹೋರಾತ್ರಿ ಧರಣಿ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.
“ಸರ್ಕಾರದ ಎರಡು ಕಟ್ಟಡಗಳನ್ನು ನೆಲಸಮ ಮಾಡಿರುವ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ 11 ಮಂದಿ ವಿರುದ್ಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕಾರ 157(2), 246(8)ರ ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಒತ್ತಾಯಿಸಿದರು.
ಸಾಮಾಜಿಕ ಕಾರ್ಯಕರ್ತ ಪ್ರಸನ್ನಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾಖಾನ್, ಹೊನ್ನಾಳಿ ತಹಶೀಲ್ದಾರ್ ಪತ್ರವೊಂದನ್ನು ಬರೆದಿದ್ದು, “ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ನಾಡ ಕಚೇರಿ ಶಿಥಿಲಗೊಂಡಿದ್ದು, ಆ ಕಟ್ಟಡವನ್ನು ಮರು ನಿರ್ಮಾಣ ಮಾಡಬೇಕಾಗಿರುವುದರಿಂದ ಕೂಡಲೆ ಅದೇ ಜಾಗದಲ್ಲಿ ನೂತನ ನಾಡ ಕಚೇರಿ ನಿರ್ಮಾಣಕ್ಕೆ ತಮ್ಮ ಆಡಳಿತ ಮಂಡಲಿ ಅವಕಾಶ ಮಾಡಿಕೊಡಬೇಕೆಂದು ಪತ್ರ ಬರೆದಿದ್ದರು” ಎಂದು ಉಲ್ಲೇಖಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಶ್ರೀಗಂಧ ಬೆಳೆಯಲು ಹೊಸ ನೀತಿ: ಸಚಿವ ಈಶ್ವರ್ ಖಂಡ್ರೆ
“ಪತ್ರದನ್ವಯ ಅಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಾನಂದಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹೊನ್ನಾಳಿ ತಹಸೀಲ್ದಾರ್ ಅವರು ಗ್ರಾಮ ಪಂಚಾಯಿತಿಗೆ ಬರೆದ ಪತ್ರದ ಬಗ್ಗೆ ಚರ್ಚಿಸಿ ಸದರಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ನಾಡ ಕಚೇರಿಯ ಕಟ್ಟಡ ನಿರ್ಮಾಣ ಮಾಡಲು ಇಲಾಖೆ ನಿಯಾಮಾನುಸಾರ ಹಸ್ತಾಂತರ ಮಾಡಿಕೊಡಲು ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿತ್ತು. ಇದನ್ನು ಹೊರತುಪಡಿಸಿ ನಾಡಕಚೇರಿ ನೆಲಸಮ ಮಾಡಿರುವುದಕ್ಕೂ ನಮಗೂ ಸಂಬಂಧವಿಲ್ಲ” ಎಂದು ವಿವರಿಸಿದ್ದಾರೆ.
ಧರಣಿಯಲ್ಲಿ ಸುಜ್ಞಾನಮೂರ್ತಿ, ಇತರೆ ಕಾರ್ಯಕರ್ತರು ಇದ್ದರು.