ಮೈಸೂರಿನ ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ ಎಂದು ತಿಳಿಸಿದರು.
2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.
ಇದನ್ನು ಓದಿದ್ದೀರಾ? ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ ಭರವಸೆ
ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.
